ಬೆಂಗಳೂರು
ಮುಂಬರುವ ಲೋಕಸಭಾ ಚುನಾವಣೆಯ ನಂತರ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ಕಲ್ಪಿಸಲಿದ್ದು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಕೆ.ಸಿ. ವೇಣುಗೋಪಾಲ್ ರೆಡ್ಡಿ ಬೆಂಬಲಿಗರಿಗೆ ಸೂಚಿಸಿದ್ದಾರೆ.
ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಮಹಾಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ್ ಹಾಗೂ ಮಾಜಿ ಮೇಯರ್ ಮಂಜುನಾಥರೆಡ್ಡಿ ವೇಣುಗೋಪಾಲ್ ಅವರು ತಂಗಿದ್ದ ನಗರದ ಕುಮಾರ ಕೃಪಾ ಅತಿಥಿಗೃಹದ ಮುಂದೆ ಪ್ರತಿಭಟನೆ ನಡೆಸಿದರು.
ನಂತರ ವೇಣುಗೋಪಾಲ್ ಪ್ರತಿಭಟನಾ ನಿರತರ ಜತೆ ಚರ್ಚೆ ನಡೆಸಿ, ಮುಂದಿನ ಲೋಕಸಭಾ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಚುನಾವಣೆಯತ್ತ ಗಮಹರಿಸಿ. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದು ಬಹಳ ಮುಖ್ಯವಾಗಿದ್ದು, ಚುನಾವಣೆ ಬಳಿಕ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ಅಥವಾ ಉನ್ನತ ಹುದ್ದೆ ನೀಡಲಾಗುವುದು ಎಂದು ಆಶ್ವಾಸನೆ ಕೊಟ್ಟಿದ್ದಾರೆ.
ಸಭೆಯ ನಂತರ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್ ಮಾತನಾಡಿ, ಲೋಕಸಭಾ ಚುನಾವಣೆ ನಂತರ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದಾರೆ. ನಾವು ಅಲ್ಲಿಯವರೆಗೆ ಕಾಯುತ್ತೇವೆ. ರಾಮಲಿಂಗಾ ರೆಡ್ಡಿ ಅವರಿಗೆ ಯಾವುದೇ ಖಾತೆ ನೀಡಿದರೂ ಅವರು ನಿಭಾಯಿಸಬಲ್ಲರು. ಬೆಂಗಳೂರು ನಗರದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲು ನಮ್ಮ ನಾಯಕರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ನಾವು ಯಾರೂ ರಾಜೀನಾಮೆ ನೀಡುವುದಿಲ್ಲ.
ಪಕ್ಷದ ವರಿಷ್ಠರ ಮಾತಿಗೆ ಮನ್ನಣೆ ನೀಡಿ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇವೆ ಎಂದು ಹೇಳಿದರು.ಮಾಜಿ ಮೇಯರ್ ಮಂಜುನಾಥ ರೆಡ್ಡಿ ಮಾತನಾಡಿ, ವೇಣುಗೋಪಾಲ್ ಅವರು ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಮಲಿಂಗಾರೆಡ್ಡಿ ಅವರಿಗೆ ಅನ್ಯಾಯ ಆಗಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಅವರ ಮನವಿಗೆ ಮನ್ನಣೆ ನೀಡುತ್ತೇವೆ ಎಂದರು.
ಲೋಕಸಭೆ ಚುನಾವಣೆ ಬಳಿಕ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಅಥವಾ ಪಕ್ಷದಲ್ಲಿ ಉನ್ನತ ಹುದ್ದೆ ದೊರಕಿಸಿಕೊಡುವುದಾಗಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಿನ್ನೆ ಭರವಸೆ ನೀಡಿದ್ದರು. ಆದರೆ ಇಂದು ರೆಡ್ಡಿ ಬೆಂಬಲಿಗರು ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧವೇ ಘೋಷಣೆ ಕೂಗಿದರು. ಬಳಿಕ ವೇಣುಗೋಪಾಲ್ ನೀಡಿದ ಭರವಸೆಯಿಂದ ಬೆಂಬಲಿಗರು ಪ್ರತಿಭಟನೆಯನ್ನು ಹಿಂಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/09/venugopal-759.gif)