ಮಧುಗಿರಿ
2017-18 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಕಾಯಕಲ್ಪ ಪ್ರಶಸ್ತಿಯು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಲಭಿಸಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ. ರತ್ನಾವತಿ ತಿಳಿಸಿದರು.
ಭಾನುವಾರ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿನ ಸೌಲಭ್ಯ, ಸ್ವಚ್ಚತೆ, ಶುಚಿತ್ವ, ಗುಣಮಟ್ಟ, ನೈರ್ಮಲ್ಯ ಮತ್ತಿತರರ ವಿಷಯಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡುತ್ತಾರೆ. ಅದರಂತೆ ನಮ್ಮ ಆಸ್ಪತ್ರೆಯು ಪ್ರಶಸ್ತಿಗೆ ಭಾಜನವಾಗಿದೆ. ಆರೋಗ್ಯ ಮತ್ತು ಕುಟುಂಬ ಇಲಾಖೆಯ ವತಿಯಿಂದ ನೀಡಲಾಗುವ ರಾಜ್ಯದ ಆಸ್ಪತ್ರೆಗಳ ಸಾಲಿನ ಪಟ್ಟಿಯಲ್ಲಿ ನಮ್ಮ ಆಸ್ಪತ್ರೆ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಬೆಂಗಳೂರಿನ ಬಿಎಂಸಿಆರ್ಐ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರಾದ ಶಿವಾನಂದ್ ಪಾಟೀಲ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ರತನ್ ಖೇಲ್ಕರ್, ಇಲಾಖೆಯ ಆಯುಕ್ತರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ಹಿಂದಿಗಿಂತ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಹಳ ಬದಲಾವಣೆ ಕಂಡಿದೆ. ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯು ಈಗಾಗಲೇ ಮೇಲ್ದರ್ಜೆಗೇರುವ ಹಂತ ತಲುಪುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರಿಗೆ ಅನುಕೂಲ ಮಾಡುವ ಉದ್ದೇಶದಿಂದ ವಾಹನಗಳ ಪಾರ್ಕಿಂಗ್, ಸುತ್ತಲೂ ಉತ್ತಮವಾದಂತಹ ಹಸಿರು ಉದ್ಯಾವನವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು. ತಂಡದ ಸದಸ್ಯರಾದ ಡಾ.ಗಂಗಾಧರ್, ಶ್ರೂಷಕರಾದ ಸರಸ್ವತಿ, ಶಿವಕುಮಾರ್ ಮತ್ತಿತರರು ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/09-madhugiri-01.gif)