ಬೆಂಗಳೂರು
ಭಾರತ್ ಬಂದ್ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪೊಲೀಸರು ಕರ್ತವ್ಯ ನಿರ್ವಹಿಸಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಂಡು ಕೆಲಸ ಮಾಡದೇ ಎಲ್ಲಾ ಕಡೆ ಓಡಾಡಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಸದಾಶಿವನಗರದ ನಿವಾಸದಲ್ಲಿಂದು ಬಂದ್ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕೆಲವು ಕಡೆ ಬಸ್ಸುಗಳ ಮೇಲೆ ಕಲ್ಲು ತೂರಾಟವಾಗಿದ್ದು, ಕಲ್ಲು ತೂರಾಟ ನಡೆಸಿದವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಚಿವ ಪುಟ್ಟರಂಗ ಶೆಟ್ಟಿ ಅವರ ಸಿಬ್ಬಂದಿ ಬಳಿ ಹಣ ಪತ್ತೆ ಪ್ರಕರಣವನ್ನು ಎಸಿಬಿಗೆ ವಹಿಸಲಾಗಿದ್ದು, ತಾವು ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ. ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ ಮಾಡಲಿ. ತನಿಖೆ ಮುಗಿಯುವ ಮುಂಚೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಇದೆಲ್ಲವೂ ಷಡ್ಯಂತ್ರವಿರಬಹುದು ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
