ಶಿರಾ
ದೇಶದ ರಾಜಕೀಯ ದಿಕ್ಸೂಚಿ ಬದಲಾವಣೆ ದೃಷ್ಟಿಯಿಂದ ಮೈತ್ರಿ ಅಭ್ಯರ್ಥಿ ಗೆಲ್ಲವ ಅವಶ್ಯಕತೆ ಇದೆ. 5 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ರೈತರು ಮತ್ತು ಜನಸಾಮಾನ್ಯರಿಗೆ ನೀಡಿದಂತಹ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ.
ಕೋಮುವಾದಿ ಪಕ್ಷ ದೇಶದ ಚೌಕಿದಾರ್ ಆಗಲು ಸಾಧ್ಯವಿಲ್ಲ. ಜಾತ್ಯತೀತ ಸಿದ್ದಾಂತ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹಾಗೂ ತುಮಕೂರು ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ದೇವೇಗೌಡರನ್ನು ಬೆಂಬಲಿಸಿ ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಅವರು ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಚಿರತಹಳ್ಳಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮತಯಾಚನೆ ಮಾಡಿ ಮಾತನಾಡಿದರು.
ದೇವೇಗೌಡರಂತ ಮತ್ಸದ್ದಿ ರಾಜಕಾರಣಿ ತುಮಕೂರು ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾಗುವ ಅನಿವಾರ್ಯತೆ ಇದ್ದು, ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಹಕಾರಿಯಾಗಲಿದ್ದು, ಕುಡಿಯುವ ನೀರಿನ ಬವಣೆ ಶಾಶ್ವತವಾಗಿ ನೀಗಲಿದೆ ಎಂಬ ವಿಶ್ವಾಸವಿದೆ ಎಂದರು.
ಶಾಸಕ ಬಿ.ಸತ್ಯನಾರಾಯಣ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿ ಕೊಂಡಿರುವ ಕಾರಣ, ರಾಷ್ಟ್ರದಲ್ಲಿ ಬಿಜೆಪಿ ಆಡಳಿತ ಕೊನೆಗಾಣಿಸುವ ಉದ್ದೇಶದಿಂದ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ಮಾಡುವ ಮೂಲಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿರುವ 48 ಸಾವಿರ ರೈತರ ಸಾಲಮನ್ನಾ, ಹಿರಿಯ ನಾಗರಿಕರಿಗೆ ವಾರ್ಷಿಕ 12 ಸಾವಿರ ರೂಪಾಯಿ ಯಂತಹ ಯೋಜನೆಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವುದರ ಜೊತೆಗೆ ನರೇಂದ್ರ ಮೋದಿ ಆಡಳಿತದ ವೈಫಲ್ಯಗಳನ್ನು ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕೆಂದರು.
ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಸಾಲಿಂಗಯ್ಯ, ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಕಲ್ಕೆರೆ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್, ಜಿಪಂ ಮಾಜಿ ಉಪಾಧ್ಯಕ್ಷ ಗಡಾರಿ ಹನುಮಂತಪ್ಪ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ಡಿ.ಮಲ್ಲೇಶ್, ಮುಖಂಡ ಪ್ರಕಾಶ್ಗೌಡ, ಸಿ.ರಾಮಕೃಷ್ಣ, ಕಾಂಗ್ರೆಸ್ ಮುಖಂಡ ಲಕ್ಕನಹಳ್ಳಿ ಕುಮಾರ್, ಗೋಣಿಹಳ್ಳಿ ದೇವರಾಜು, ಶಶಿಧರಗೌಡ, ಅಜ್ಜೇಗೌಡ, ಜಿಪಂ ಮಾಜಿ ಸದಸ್ಯ ಗುಜ್ಜಾರಪ್ಪ, ಜೆಡಿಎಸ್ ಉಪಾಧ್ಯಕ್ಷ ಮಂಜುನಾಥ್, ಗ್ರಾಪಂ ಮಾಜಿ ಅಧ್ಯಕ್ಷ ಡಿ.ಮಂಜುನಾಥ್, ತಾಪಂ ಸದಸ್ಯ ಮಂಜುನಾಥ್, ಬೆಜ್ಜಿಹಳ್ಳಿ ರಾಮಚಂದ್ರಪ್ಪ, ಹಬೀಬ್ಖಾನ್, ಸತ್ಯನಾರಾಯಣ, ಗುರುಮೂರ್ತಿ, ನರಸಿಂಹಯ್ಯ, ಲೋಕೇಶ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.