ದಾವಣಗೆರೆ:

ನಗರದ ವಿವಿಧೆಡೆಯಲ್ಲಿ ದಾಳಿ ನಡೆಸಿರುವ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ಅಧಿಕಾರಿಗಳು ಒಟ್ಟು 42 ಪ್ರಕರಣಗಳನ್ನು ದಾಖಲಿಸಿ, 4,650 ರೂ. ದಂಡ ವಿಧಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳವು ದಾವಣಗೆರೆಯ ಜಯದೇವ ವೃತ್ತದಿಂದ ರಾಂ & ಕೋ ಸರ್ಕಲ್ವರೆಗಿನ ಸುತ್ತಮುತ್ತಲಿನ ಹೊಟೇಲ್, ಬಾರ್ & ರೆಸ್ಟೋರೆಂಟ್, ಪಾನ್ಶಾಪ್ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿತು.
ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003ರ ಸೆಕ್ಷನ್ 4ರ ಅಡಿಯಲ್ಲಿ 36 ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 05 ಪ್ರಕರಣ, ಸೆಕ್ಷನ್ 6ಬಿ ಅಡಿಯಲ್ಲಿ 01 ಪ್ರಕರಣ ಸೇರಿದಂತೆ ಒಟ್ಟು 42 ಪ್ರಕರಣಗಳನ್ನು ದಾಖಲಿಸಿ, 4,650 ರೂ. ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.
ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ.ಎಲ್.ಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ಕೆ.ಪಿ.ದೇವರಾಜ್, ಪಾಲಿಕೆ ಆರೋಗ್ಯ ನಿರೀಕ್ಷಕ ನಿಖಿಲ್ ಜೆ.ಹೆಚ್, ಅಂಜನಪ್ಪ.ಟಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಡಾ.ವೀರಪ್ಪ, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಎಎಸ್ಐ ರವಿಯಪ್ಪ.ಒ. ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
