ತುಮಕೂರು
ಕೊರೊನಾ ಸೋಂಕಿನ ಆತಂಕದ ನಡುವೆ ಗುರುವಾರ ಎಸ್ಎಸ್ಎಲ್ಸಿಯ ದ್ವಿತೀಯ ಭಾಷೆ ಇಂಗ್ಲೀಷ್/ಕನ್ನಡ ವಿಷಯದ ಪರೀಕ್ಷೆಯನ್ನು ವಿದ್ಯಾರ್ಥಿಗಳು ನಿರಾತಂಕವಾಗಿ ಬರೆದರು. ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 144 ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ತಡೆಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತು ನೀಡಲಾಗಿತ್ತು.
ಎರಡು ಜಿಲ್ಲೆಗಳ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು ಸೇರಿ ಒಟ್ಟು 723 ಶಾಲೆಗಳ 37,306 ವಿದ್ಯಾರ್ಥಿಗಳ ಪೈಕಿ 468 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ತುಮಕೂರು ಶೈಕ್ಷಣಿಕ ಜಿಲ್ಲೆಯ 21139 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿಯಾಗಿದ್ದವರು, ಇವರಲ್ಲಿ 20,733 ಮಂದಿ ಪರೀಕ್ಷೆ ಬರೆದರು. 406 ಜನ ಗೈರುಹಾಜರಾಗಿದ್ದರು. ಕಂಟೈನ್ಮೆಂಟ್ ಪ್ರದೇಶದಿಂದ ಬಂದ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 207 ವಲಸೆ ಮಕ್ಕಳ ಪೈಕಿ 192 ಜನ ಪರೀಕ್ಷೆಗೆ ಹಾಜರಾಗಿ, 15 ಜನ ಗೈರಾಗಿದ್ದರು.
ಗೈರುಹಾಜರಾದ ಮಕ್ಕಳು ಯಾವ ಶಾಲೆಯವರು, ಗೈರಾಗಲು ಕಾರಣವೇನು ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಈ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದ ವಿದ್ಯಾರ್ಥಿಗಳು ಸಪ್ಲಿಮೆಂಟರಿ ಬರೆಯಬಹುದು ಎಂದು ತುಮಕೂರು ಡಿಡಿಪಿಐ ಎಂ.ಆರ್.ಕಾಮಾಕ್ಷಿ ಹೇಳಿದರು.
ಮಧುಗಿರಿ ಶೈಕ್ಷಣಿಕ ಜಿಲ್ಲೆಯ 13,073 ವಿದ್ಯಾರ್ಥಿಗಳಲ್ಲಿ 12,486 ಜನ ಪರೀಕ್ಷೆಗೆ ಹಾಜರಾಗಿ 587 ಮಂದಿ ಗೈರುಹಾಜರಾಗಿದ್ದರು. ಕಂಟೈನ್ಮೆಂಟ್ ವಲಯದಿಂದ ಬಂದ 9 ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆಗೆ ಹಾಜರಾದ ವೇಳೆ ಅನಾರೋಗ್ಯ ಕಾಣಿಸಿದ ಇಬ್ಬರು ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಹೊರ ರಾಜ್ಯದ 8 ಜನ ಪರೀಕ್ಷೆ ಬರೆದರು. 308 ವಲಸೆ ವಿದ್ಯಾರ್ಥಿಗಳಲ್ಲಿ ಒಬ್ಬರು ಪರೀಕ್ಷೆಗೆ ಗೈರುಹಾಜರಾಗಿದ್ದರು ಎಂದು ಮಧುಗಿರಿ ಡಿಡಿಪಿಐ ರೇವಣ್ಣಸಿದ್ದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಭೀತಿಯಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆ, ಸೋಂಕು ತಡೆಯುವ ಅಗತ್ಯ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಆದ್ಯತೆ ನೀಡಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿತ್ತು. ಪ್ರತಿ ಪರೀಕ್ಷಾ ಕೇಂದ್ರದ ದ್ವಾರದಲ್ಲಿ ಪ್ರತಿ ವಿದ್ಯಾರ್ಥಿ, ಸಿಬ್ಬಂದಿಯನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಆರೋಗ್ಯ ತಪಾಸಣೆ ಮಾಡಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿ ತಮ್ಮ ನೊಂದಣಿ ಸಂಖ್ಯೆ ಇರುವ ಕೊಠಡಿಗಳ ಹುಡುಕಾಟದಲ್ಲಿ ಗೊಂದಲಕ್ಕೀಡಾಗದಂತೆ, ವಿದ್ಯಾರ್ಥಿಗಳು ಗುಂಪುಗೂಡದಂತೆ ತಡೆಯಲು ಹಿಂದಿನ ದಿನವೇ ಆಯಾ ಶಾಲೆಗಳು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿತ್ತು.
ಜಿಲ್ಲಾ ಪಂಚಾಯ್ತಿ ಸಿಇಓ ಶುಭಾ ಕಲ್ಯಾಣ್, ಎಸ್ಪಿ ಡಾ.ವಂಶಿಕೃಷ್ಣ, ಡಿಡಿಪಿಐ ಎಂ.ಆರ್.ಕಾಮಾಕ್ಷಿ, ಮತ್ತಿತರ ಅಧಿಕಾರಿಗಳು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಿದ್ಧಗಂಗಾಮಠ, ಸೈಂಟ್ಮೇರಿಸ್, ಎಂಪ್ರೆಸ್ ಶಾಲೆಗಳ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದ ಸಿಇಓ ಶುಭಾ ಕಲ್ಯಾಣ, ಶಾಂತಿಯುತವಾಗಿ, ನಿರಾತಂಕವಾಗಿ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ ಯಶಸ್ವಿಯಾಗಿ ನಡೆಯಲು ಪೊಲೀಸರು. ಮಕ್ಕಳ ಪೋಷಕರು ಸಹಕರಿಸಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಮೊದಲ ದಿನ ತಾವು ಪರೀಕ್ಷೆ ಬರೆಯುವ ಕೊಠಡಿ ಪತ್ತೆಹಚ್ಚಲು ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಪರೀಕ್ಷೆ ಯಾವುದೇ ಗೊಂದಲ, ಆತಂಕವಿಲ್ಲದೆ ನಡೆಯುತ್ತಿದೆ ಎಂದು ಶುಭಾ ಕಲ್ಯಾಣ್ ಹೇಳಿದರು.
ಪರೀಕ್ಷೆ ಪಾರದರ್ಶಕವಾಗಿ ನಡೆಯಬೇಕು ಎಂಬ ಕಾರಣಕ್ಕೆ ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಅಗತ್ಯವಿರುವ ಕಡೆಗಳಿಂದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತಂದು, ವಾಪಸ್ ಹೋಗಲು ಉಚಿತ ಬಸ್ಸಿನ ವ್ಯವಸ್ಥೆ ಮಾಡಲಾಗಿತ್ತು. ಇಂತಹ ಬಸ್ಗಳಲ್ಲಿ ವಿದ್ಯಾರ್ಥಿಗಳ ಜೊತೆ ಆಯಾ ಶಾಲೆ ಶಿಕ್ಷಕರೂ ಬಂದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
