ದಾವಣಗೆರೆ :
ನಗರದ ಹೊರ ವಲಯದ ಶಿವಗಂಗೋತ್ರಿ ಆವರಣದಲ್ಲಿ ಇಂದು ದಾವಣಗೆರೆ ವಿಶ್ವವಿದ್ಯಾನಿಲಯದ 6ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ವಿವಿಯ ಕುಲಪತಿ ಪ್ರೊ.ಶರಣಪ್ಪ ವೈಜನಾಥ್ ಹಲಸೆ ತಿಳಿಸಿದರು
ಮಂಗಳವಾರ ವಿವಿಯ ಆಡಳಿತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ದಾವಣಗೆರೆ ವಿಶ್ವವಿದ್ಯಾನಿಲಯದ ಆರನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆಯನ್ನು ಕರ್ನಾಟಕದ ರಾಜ್ಯಪಾಲರು ಮತ್ತು ವಿಶ್ವವಿದ್ಯಾನಿಲಯದ ಕುಲಾಧಿಪತಿ ವಜುಭಾಯಿ ರುಡಾಭಾಯಿ ವಾಲಾ ವಹಿಸಿಕೊಳ್ಳಲಿದ್ದಾರೆ. ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳು ಮತ್ತು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಉಪಸ್ಥಿತರಿರಲಿದ್ದಾರೆ. ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಸಂಸ್ಥೆಯ ನಿರ್ದೇಶಕ ಪ್ರೊ.ಎಸ್.ಸಿ.ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಘಟಿಕೋತ್ಸವದಲ್ಲಿ ಹಿರಿಯ ವೈದ್ಯ ಎಂ.ಎಸ್.ಎಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು. ಅಲ್ಲದೆ, 13 ಅಭ್ಯರ್ಥಿಗಳಿಗೆ ಪಿಹೆಚ್ಡಿ ಹಾಗೂ ಒಟ್ಟು 10,648 ಮಂದಿ ಸ್ನಾತಕ ಪದವಿ ವಿದ್ಯಾರ್ಥಿಗಳು, ಹಾಗೂ 1,895 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲಿದ್ದಾರೆ. ಸ್ನಾತಕ ಮತ್ತು ಸ್ನಾತಕೊತ್ತರ ಪದವಿಗಳು ಸೇರಿ ಒಟ್ಟು 12,543 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
