ಬೆಂಗಳೂರು
ಉಪಚುನಾವಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪಕ್ಷದಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಚುನಾವಣೆಯ ಸಂಘಟನೆಯ ಜವಾಬ್ದಾರಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಹಿಸಿಕೊಂಡಿದ್ದಾರೆ. ಎಲ್ಲರ ಸಹಕಾರದಿಂದ ಚುನಾವಣೆ ಎದುರಿಸುವುದಾಗಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯುವ ಚುನಾವಣೆಯಲ್ಲಿ ಪಕ್ಷಕ್ಕೆ ಅತಿ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದರು.
ಸುಪ್ರೀಂ ಕೋರ್ಟ್ ಅನ್ನು ಮೀರಿ ಹೋಗಲು ಸಾಧ್ಯವಿಲ್ಲ. ಅನರ್ಹರು ರಾಜೀನಾಮೆ ನೀಡದೇ ಇದ್ದಿದ್ದರೆ ಈ ಸರ್ಕಾರ ರಚನೆಯಾಗಲು ಸಾಧ್ಯವಿರಲಿಲ್ಲ. ಹೀಗಾಗಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು. ನಮ್ಮನ್ನು ನಂಬಿ ಬಂದಿರುವ ಅನನರ್ಹ ಶಾಸಕರ ಮಾತಿಗೆ ಪೂರ್ಣ ಬೆಲೆ, ಗೌರವ ಕೊಡುತ್ತೇವೆ. ಅನರ್ಹ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದಾಗಿ ಈಶ್ವರಪ್ಪ ಹೇಳಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮತ್ತೆ ಮೈತ್ರಿ ಮಾಡಿಕೊಂಡರೂ ಅಥವಾ ಬೇರೆ ಬೇರೆಯಾಗಿ ಅಗಿ ಕಣಕ್ಕಿಳಿದರೂ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ. ಕಾಂಗ್ರೆಸ್ – ಜೆಡಿಎಸ್ ಇಷ್ಟು ದಿನಗಳ ಕಾಲ ಬಲವಂತಕ್ಕೆ ತಾಳಿಕಟ್ಟಿಕೊಂಡು ಇದ್ದರೆ ವಿನಃ ಒಟ್ಟಾಗಿ ಸಂಸಾರ ಮಾಡಿರಲಿಲ್ಲ. ಈಗ ಒಟ್ಟಾಗಿ ಬಂದರೂ ಪಕ್ಷಕ್ಕೇನೂ ನಷ್ಟವಿಲ್ಲ ಎಂದು ಲೇವಡಿ ಮಾಡಿದರು.ಪಕ್ಷ ಸತ್ಯಂತ ಸಮರ್ಥವಾಗಿ ಸಂಘಟನೆಯಾಗಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದು ವಿಶ್ವಾಸವ್ಯಕ್ತಪಡಿಸಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆದ್ದಿತ್ತು. ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಪೂರ್ಣಾವಧಿಯ ಸರ್ಕಾರ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಚುನಾವಣೆ ಘೋಷಣೆಯಾಗಿರುವುದರಿಂದ ಅಧಿವೇಶನ ಮುಂದೂಡಬೇಕೇ ಬೇಡವೇ ಎಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/7487154911a72325286a1404e1a8992b.gif)