ಬೆಂಗಳೂರು:
ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ವಲಯವಾರು ಕೃಷಿನೀತಿ ಜಾರಿ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಜಲಾನಯನ ಅಭಿವೃದ್ಧಿ ಇಲಾಖೆಯ ಸುಜಲ ಯೋಜನೆಯಡಿ ಭೂಸಂಪನ್ಮೂಲ ಮಾಹಿತಿ ಪಾಲುದಾರರ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಫಾಟಿಸಿ ಮಾತನಾಡಿದ ಅವರು, ಪ್ರದೇಶಕ್ಕನುಗುಣವಾದ ಬೆಳೆಗಳನ್ನು ಬೆಳೆಯಲು ರೈತರಿಗೆ ಅರಿವು ಮೂಡಿಸುವ ಹಾಗೂ ನೀರಿನ ಸದ್ಬಳಕೆ ಕುರಿತು ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಕೃಷಿಗೆ ಅಗತ್ಯವಿರುವ ಅಂಶಗಳನ್ನು ಒಳಗೊಂಡ ಕೃಷಿನೀತಿಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಕೃಷಿಗಾಗಿ ದುಡಿಯುತ್ತಿರುವ ಹಾಗೂ ರಾಜ್ಯದಲ್ಲಿ ನೆಲೆಸಿರುವ ಕೃಷಿ ಸಂಸ್ಥೆಗಳ ಸಂಶೋಧನೆಗಳನ್ನು ಸರ್ಕಾರದ ಮಟ್ಟದಲ್ಲಿ ಅಧ್ಯಯನ ನಡೆಸಿ ಹಾಗೂ ಸಂಸ್ಥೆಗಳೊಂದಿಗೆ ಸಭೆ ನಡೆಸಿ ರಾಜ್ಯದಲ್ಲಿ ಕೃಷಿಗೆ ಸಂಬಂಧಿಸಿದ ಅತ್ಯುತ್ತಮ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.
ವಿಶ್ವಬ್ಯಾಂಕ್ ನೆರವಿನೊಂದಿಗೆ ಹಮ್ಮಿಕೊಂಡಿರುವ ಕರ್ನಾಟಕ ಜಲಾನಯನ ಅಭಿವೃದ್ಧಿ ಯೋಜನೆ 2013-14ನೇ ಸಾಲಿನಿಂದ 527 ಕೋಟಿ ರೂಪಾಯಿಗಳ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಐದು ವರ್ಷಗಳ ಯೋಜನೆಯಡಿ ಚಾಮರಾಜನಗರ, ದಾವಣಗೆರೆ, ತುಮಕೂರು, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಗದಗ, ಬೀದರ್ ಹಾಗೂ ವಿಜಯಪುರ ಜಿಲ್ಲೆಗಳ ಆಯ್ದ 2ಸಾವಿರ 531 ಕಿರುಜಲಾನಯನಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಶಿವಶಂಕರ್ ರೆಡ್ಡಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








