ಹೊನ್ನಾಳಿ:
ಅಸಮಾನತೆ, ಶೋಷಣೆ, ಅಸ್ಪಶ್ಯತೆ ಮತ್ತಿತರ ಸಾಮಾಜಿಕ ಅನಿಷ್ಟಗಳಿಂದ ರೋಸಿಹೋಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರು ಅನಿವಾರ್ಯವಾಗಿ ಹಿಂದೂ ಧರ್ಮವನ್ನು ತೊರೆದು ಬೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರರ ಒಕ್ಕೂಟದ ತಾಲೂಕು ಘಟಕದ ಅಧ್ಯಕ್ಷ, ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎಚ್. ಬಸವರಾಜ್ ಹೇಳಿದರು.
ಇಲ್ಲಿನ ಗುರುಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಡಾ.ಬಿ.ಆರ್. ಅಂಬೇಡ್ಕರ್ ಅವರ ನಡಿಗೆ ಬುದ್ಧನ ಕಡೆಗೆ” ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ವೇಳೆ ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತ ಮತ್ತು ಜಗತ್ತಿನ ಎಲ್ಲಾ ದೇಶಗಳಲ್ಲಿರುವ ಶೋಷಿತರು ಬೌದ್ಧ ಧರ್ಮ ಸ್ವೀಕರಿಸಬೇಕು ಎಂಬ ಸಂದೇಶ ರವಾನಿಸಿದರು. ನಮ್ಮ ನಾಡಿನಲ್ಲಿ ಮನುವಾದಿಗಳ ಅಟ್ಟಹಾಸದ ಪ್ರಮಾಣ ಎಷ್ಟಿತ್ತು ಎಂಬುದನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರ ಈ ನಡೆ ತಿಳಿಸುತ್ತದೆ ಎಂದು ವಿವರಿಸಿದರು.
ನಮ್ಮ ಸಮಾಜದಲ್ಲಿನ ಶೋಷಿತ ಜನಾಂಗದ ಮುಖಂಡರು, ವಿದ್ಯಾವಂತರು ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸಲು ಶ್ರಮಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಎಸ್. ಉಮಾಶಂಕರ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರರ ಒಕ್ಕೂಟದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಬಸಣ್ಣ, ಕುಮಾರನಾಯ್ಕ, ಕೃಷ್ಣಾನಾಯ್ಕ, ಪ್ರಶಾಂತ್ ಇತರರು ಮಾತನಾಡಿದರು.
ಟಿ.ಎಲ್ ಜಗದೀಶ್, ರುದ್ರಪ್ಪ, ಜೀವ್ಲಾನಾಯ್ಕ, ಜಿ. ಕೃಷ್ಣಾನಾಯ್ಕ, ಎ.ಕೆ. ನಾಗೇಶ್, ನರಸಿಂಹಪ್ಪ, ತಿಮ್ಮಪ್ಪ, ಹನುಮಂತಪ್ಪ, ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಟಿ. ಗೋಪಗೊಂಡನಹಳ್ಳಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಸಿ. ಮಂಜಪ್ಪ ಅವರನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರರ ಒಕ್ಕೂಟದ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
