ಸಚಿವ ಅನಂತ್ ಕುಮಾರ್ ಆರೋಗ್ಯ ಸುಧಾರಣೆ

ಬೆಂಗಳೂರು

          ಕ್ಯಾನ್ಸರ್‍ನಿಂದ ಬಳಲುತ್ತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಆರೋಗ್ಯ ಸುಧಾರಿಸುತ್ತಿದೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

           ಸುದ್ದಿಗಾರರ ಜತೆ ಮಾತನಾಡಿದ ಅವರು, ಸದ್ಯ ಅನಂತ್ ಕುಮಾರ್ ನಗರದ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.ನಾನೂ ಕೂಡ ಆರೋಗ್ಯ ವಿಚಾರಿಸಿದ್ದೇನೆ. ಅವರ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಯಾರೂ ಕೂಡ ಆತಂಕಪಡಬೇಕಿಲ್ಲ ಎಂದರು.

          ಹೆಚ್ಚಿನ ವಿಶ್ರಾಂತಿ ಬೇಕಿರುವ ಕಾರಣ ಆಸ್ಪತ್ರೆಯಲ್ಲಿ ಅತಿಥಿಗಳ ಭೇಟಿಗೆ ಅವಕಾಶ ನೀಡುತ್ತಿಲ್ಲ. ಆದರೆ ಅವರು ಗುಣಮಖರಾಗುತ್ತಿದ್ದಾರೆ. ಚಿಕಿತ್ಸೆ ಮುಂದುವರೆದಿದೆ. ಇದಕ್ಕಿಂತ ಹೆಚ್ಚಿನ ಮಾಹಿತಿ ನನಗೆ ಇಲ್ಲ. ಚಿಕಿತ್ಸೆ ಸೇರಿದಂತೆ ಇನ್ನಿತರ ಮಾಹಿತಿಯನ್ನು ವೈದ್ಯರೇ ನೀಡಬೇಕು ಎಂದು ಹೇಳಿದರು. ಮೂರು ಲೋಕಸಭಾ ಹಾಗೂ ಎರಡು ವಿಧಾನಸಬಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ಹಣಬಲ,ತೋಳ್ಬಲಕ್ಕೆ ಜನತೆ ಈ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಫಲಿತಾಂಶದಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು.

         ಉಪ ಚುನಾವಣೆಯಲ್ಲಿ ಜಾತಿ, ಧರ್ಮ ವಿಭಜನೆ ಮಾಡುವವರಿಗೆ ಪಾಠ ಕಲಿಸಲು ಮತದಾರರು ಸಜ್ಜಾಗಿದ್ದಾರೆ. ನಾವು ಈ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕುವುದಿಲ್ಲ. ಅವರಲ್ಲೇ ಒಡಕು ಉಂಟಾದರೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

          ಕೇಂದ್ರದ ಮಾಜಿ ಗೃಹ ಸಚಿವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಅಂಗವಾಗಿ ನಾಳೆ ಏಕತಾ ಓಟವನ್ನು ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಯೋಜಿಸುವ ಮೂಲಕ ಯುವ ಸಮೂಹಕ್ಕೆ ಪಟೇಲ್ ಮತ್ತವರ ಕೊಡುಗೆ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.

         ದೇಶಾದ್ಯಂತ ಏಕತಾ ಓಟ ನಡೆಯಲಿದೆ. ಅದರಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಏಕತಾ ಓಟ ನಡೆಯಲಿದೆ. ನಗರದ ಮೂರು ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಬೆಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ ಮಾನ್ಯತಾ ಟೆಕ್‍ಪಾರ್ಕ್‍ನಲ್ಲಿ ಬೆಳಗ್ಗೆ 8 ಗಂಟೆಗೆ ಏಕತಾ ಓಟ ನಡೆಯಲಿದ್ದು, ಟೆಕ್ಕಿಗಳು ಭಾಗಿಯಾಗಲಿದ್ದಾರೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link