ಚಳ್ಳಕೆರೆ
ಸರ್ಕಾರ ಸಮಾಜದ ಎಲ್ಲರಿಗೂ ಆರೋಗ್ಯ ಭಾಗ್ಯ ನೀಡುವ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣ, ಪುಟ್ಟ ಸಂಕ್ರಾಂಮಿಕ ರೋಗಗಳು ಸಹ ವ್ಯಕ್ತಿಯ ಪ್ರಾಣಕ್ಕೆ ಆಪತ್ತು ತಂದಿಡುವ ನಿಟ್ಟಿನಲ್ಲಿ ರೋಗಗಳ ನಿಯಂತ್ರಣಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್.ಪ್ರೇಮಸುಧಾ ತಿಳಿಸಿದರು.
ಅವರು, ಸೋಮವಾರ ಮದಕರಿ ನಗರದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅತಿಸಾರ ಭೇದಿ ವ್ಯಕ್ತಿಯನ್ನು ಅತಿ ಕಡಿಮೆ ಅವಧಿಯಲ್ಲೇ ನಿಶಕ್ತನನ್ನಾಗಿ ಮಾಡುವ ಮೂಲಕ ಅವನ ಸಾವಿಗೆ ಕಾರಣವಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ರೂಪಿಸಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆಯುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಪೌರಾಯುಕ್ತ ಪರಮೇಶ್ವರಪ್ಪ, ಯಾವುದೇ ರೋಗಗಳು ಹರಡಲು ನೈರ್ಮಲ್ಯವೇ ಕಾರಣವಾಗಿದ್ದು, ನಗರಸಭೆ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳುವ ಮೂಲಕಸ ಯಾವುದೇ ರೋಗಗಳು ಉಲ್ಬಣವಾಗದಂತೆ ಜಾಗೃತೆ ವಹಿಸುತ್ತಿದೆ.
ವಿಶೇಷವಾಗಿ ಆರೋಗ್ಯ ಇಲಾಖೆಯ ಲಸಿಕಾ ಕಾರ್ಯಕ್ರಮವೂ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೂ ನಗರಸಭೆ ಸಹಕಾರ ನೀಡುತ್ತಿದ್ದು, ನಗರ ಮಟ್ಟದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಿಡಿಪಿಒ ಸಿ.ಕೆ.ಗಿರಿಜಾಂಬ ಮಾತನಾಡಿ, ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಅತಿಸಾದ ಭೇದಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ನೀಡುವ ಸಲಹೆ ಸೂಚನೆ ಹಾಗೂ ನಿಯಂತ್ರಣ ಮಾತ್ರೆ ಪಡೆದು ಈ ರೋಗ ಹರಡದಂತೆ ಜಾಗ್ರತೆ ವಹಿಸಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ ಮಾತನಾಡಿ, ಶಾಲೆಗಳಲ್ಲಿ ಶೈಕ್ಷಣಿಕ ಅಭ್ಯಾಸದ ಜೊತೆಗೆ ಆರೋಗ್ಯದ ಜಾಗೃತೆ ಬಗ್ಗೆಯೂ ಸಹ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆರೋಗ್ಯದಿಂದ ಇದ್ದಲ್ಲಿ ಮಾತ್ರ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ. ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೆ ಅತಿಸಾದ ಭೇದಿ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಎಲ್ಲಾ ಶಿಕ್ಷಕರಿಗೂ ಸೂಚನೆ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಕಿರಿಯ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಪೇಸ್ವಾಮಿ ಹಾಗೂ ಆರೋಗ್ಯ ಇಲಾಖೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
