ಚಳ್ಳಕೆರೆ
ಬೇಸಿಗೆ ಕಾಲ ಸಮೀಪಿಸುತ್ತಿದ್ದು, ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಜಾಗ್ರತೆ ವಹಿಸಬೇಕು. ಎಲ್ಲಿ ಕುಡಿಯುವ ನೀರಿನ ಲಭ್ಯತೆ ಇಲ್ಲವೋ ಅಲ್ಲಿ ಟ್ಯಾಂಕರ್ ಮೂಲಕವಾದರೂ ಜನರಿಗೆ ನೀರು ನೀಡಬೇಕು. ನಿರ್ಲಕ್ಷೆ ವಹಿಸಿದಲ್ಲಿ ಅಂತಹವರ ಮೇಲೆ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ನೀಡಿದರು.
ಅವರು, ಶುಕ್ರವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಇಲಾಖವಾರು ಅಂಕಿಅಂಶಗಳನ್ನು ಪಡೆದು ಮಾತನಾಡಿದರು. ಗ್ರಾಮೀಣ ಭಾಗದ ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡುವಂತೆ ತಾಕೀತು ಮಾಡಿದರು.
ಕೃಷಿ ಇಲಾಖೆ ಅಧಿಕಾರಿಯಿಂದ ಮಾಹಿತಿ ಪಡೆದ ಶಾಸಕರು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಕುರಿತಂತೆ ರೈತರಲ್ಲಿ ಇನ್ನೂ ಆತಂಕ ಮನೆ ಮಾಡಿದೆ. ಸಾವಿರಾರು ರೈತರು ತಮಗೆ ಬೆಳೆ ವಿಮೆ ಹಣ ಇದುವರೆಗೂ ಬಂದಿಲ್ಲವೆಂದು ಆರೋಪಿಸುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಕೃಷಿ ಅಧಿಕಾರಿಗಳು ಯಾವುದೇ ರೈತನಿಗೆ ಬೆಳೆ ವಿಮೆ ಮೊತ್ತ ಕೈತಪ್ಪದಂತೆ ನೋಡಿಕೊಳ್ಳಬೇಕು. ಲೋಪವಿದ್ದಲ್ಲಿ ಕೂಡಲೇ ಸರಿಪಡಿಸಿಬೇಕು. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗುವುದನ್ನು ಸಹಿಸಲು ಸಾಧ್ಯವಿಲ್ಲವೆಂದರು.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರೈಸಬೇಕು ಸರ್ಕಾರ ಹಲವಾರು ಕಾಮಗಾರಿಗಳಿಗೆ ಹಣ ಬಿಡುಗಡೆಗೊಳಿಸಿದ್ದು, ಈ ಹಣ ಮತ್ತೆ ವಾಪಾಸ್ ಸರ್ಕಾರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು. ತಾಲ್ಲೂಕು ಪಂಚಾಯಿತಿ ಸದಸ್ಯ ಸಲಹೆಗಳನ್ನು ಕಾಮಗಾರಿಗಳಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಸದಸ್ಯ ಈ.ರಾಮರೆಡ್ಡಿ, ಗದ್ದಿಗೆ ತಿಪ್ಪೇಸ್ವಾಮಿ, ಟಿ.ಗಿರಿಯಪ್ಪ, ಸಣ್ಣಸೂರಯ್ಯ, ಸಮರ್ಥರಾಯ, ಪಿ.ತಿಮ್ಮಾರೆಡ್ಡಿ, ತಿಪ್ಪೇಸ್ವಾಮಿ, ಜಿ.ವೀರೇಶ್ ಮುಂತಾದವರು ಅಧಿಕಾರಿಗಳು ಕೆಲಸದ ವೇಳೆಯಲ್ಲಿ ಕಚೇರಿಯಲ್ಲಿ ಇರುವುದಿಲ್ಲ. ಯಾವಗ ಕೇಳಿದರೂ ಕಾಮಗಾರಿ ವೀಕ್ಷಣೆಗೆ ಹೋಗುದ್ದಾರೆಂದು ಕಚೇರಿ ಸಿಬ್ಬಂದಿ ತಿಳಿಸುತ್ತಾರೆ. ದೂರವಾಣಿ ಸಂಪರ್ಕಕ್ಕೂ ಸಹ ಸಿಗುವುದಿಲ್ಲವೆಂದು ತಮ್ಮ ಅಸಾಯಕತೆಯನ್ನು ಹೊರಹಾಕಿದರು. ಶಾಸಕ ಟಿ.ರಘುಮೂರ್ತಿ, ಯಾವ ಅಧಿಕಾರಿಯೂ ಸದಸ್ಯರು ದೂರವಾಣಿಯನ್ನು ಸ್ವೀಕರಿಸುವಲ್ಲಿ ನಿರ್ಲಕ್ಷ್ಯೆ ವಹಿಸಕೂಡದು ಎಂದರು.
ಆರೋಗ್ಯ ಇಲಾಖೆ ಅಧಿಕಾರಿ ಡಾ.ಎನ್.ಪ್ರೇಮಸುಧಾ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ವೈದ್ಯರ ಕೊರತೆ ನೀಗಿಸಲು ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಜಾಜೂರು, ಆರೋಗ್ಯ ಕೇಂದ್ರಕ್ಕೆ ಹೊಸ ಆಂಬ್ಯುಲೆನ್ಸ್ ವಾಹನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕ್ಷೇತ್ರದ ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯವಿರುವ ಎಲ್ಲಾ ಔಷಧ ಮಾತ್ರೆಗಳು ಲಭ್ಯವಿದ್ದು, ವಿತರಣೆಯಾಗುತ್ತಿವೆ ಎಂದರು.
ತೋಟಗಾರಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು ರೈತರಿಗೆ ಸಬ್ಸಿಡಿ ಹಣ ನಿಗದಿತ ಅವಧಿಗೆ ಪಾವತಿಯಾಗುವಂತೆ ಎಚ್ಚರಿಕೆ ವಹಿಸಬೇಕು, ಇಲಾಖೆಯ ಎಲ್ಲಾ ಯೋಜನೆಗಳ ಬಗ್ಗೆ ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಮಾಹಿತಿ ನೀಡುವಂತೆ ಸೂಚಿಸಿರು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು ಹಾಸ್ಟಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಮಟ್ಟಿಗೆ ಸೂಕ್ತ ಸೌಲಭ್ಯ ಒದಗಿಸಿ. ಯಾವುದೇ ವಿದ್ಯಾರ್ಥಿಗೆ ಕೊರತೆ ಉಂಟಾಗದಂತೆ ಗಮನಿಸಬೇಕು, ಪರೀಕ್ಷ ಸಮಯ ಹತ್ತಿರವಾಗುತ್ತಿದ್ದು, ಅಧಿಕಾರಿಗಳು ಸಹ ಹಾಸ್ಟಲ್ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಅಭ್ಯಾಸದ ಬಗ್ಗೆ ನಿಗಾವಹಿಸಬೇಕೆಂದರು.
ತಾಲ್ಲೂಕು ಪಂಚಾಯಿತಿ ಸದಸ್ಯರಾದ ತಿಪ್ಪೇಸ್ವಾಮಿ, ಉಮಾಜನಾರ್ಥನ್, ಕವಿತಾರಾಮಣ್ಣ, ಸಾಕಮ್ಮ, ತಿಪ್ಪಕ್ಕ ಮುಂತಾದವರು ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಳ್ಳುವ ಯೋಜನೆಗಳ ಬಗ್ಗೆ ತಾಲ್ಲೂಕು ಪಂಚಾಯಿತಿ ಸದಸ್ಯರನ್ನು ಅಲಕ್ಷಿಸುತ್ತಿದ್ಧಾರೆಂದು ಆರೋಪಿಸಿದರು. ಸಭೆಗೆ ಬಾರದ ಅಂಬೇಡ್ಕಿರ್ ಅಭಿವೃದ್ಧಿ ಅಧಿಕಾರಿಯ ಮೇಲೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ, ಉಪಾಧ್ಯಕ್ಷೆ ತಿಪ್ಪಮ್ಮಲಿಂಗಾರೆಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆಂಜನೇಯ, ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀಧರ್ ಐ.ಬಾರಿಕೇರ್ ಸ್ವಾಗತಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
