ಬೆಂಗಳೂರು
ವೇಗವಾಗಿ ಬಂದ ಡ್ಯೂಕ್ ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಸಹ ನಿರ್ದೇಶಕರೊಬ್ಬರು ಮೃತಪಟ್ಟಿದ್ದು ಬೈಕ್ ಸವಾರ ಗಾಯಗೊಂಡಿರುವ ದುರ್ಘಟನೆ ಚಂದ್ರಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕುಣಿಗಲ್ನ ಚೌಡನಕುಪ್ಪೆಯ ರಾಜೇಶ್ (26)ಎಂದು ಗುರುತಿಸಲಾಗಿದೆ.ಗಾಯಗೊಂಡಿರುವ ಬೈಕ್ ಚಾಲಕ ರಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದೆ.
ಸ್ನೇಹಿತರ ಮನೆಯಲ್ಲಿದ್ದುಕೊಂಡು, ಸಿನಿಮಾವೊಂದಕ್ಕೆ ಸಹ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ರಾಜೇಶ್ ರಾತ್ರಿ 8.50ರ ವೇಳೆ ನಾಗರಬಾವಿಯ ಮಾನಸನಗರದ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬೈಕ್ನಲ್ಲಿ ಬಂದ ರಮೇಶ್ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ರಾಜೇಶ್ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಮೇಶ್ ಕೂಡ ಗಾಯಗೊಂಡು ಒದ್ದಾಡುತ್ತಿದ್ದು,ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸೈಕಲ್ ಸವಾರ ಸಾವು
ಚಂದ್ರ ಲೇಔಟ್ನ ಬಾಲಾಜಿ ಸಿಲ್ಕ್ ಹೌಸ್ ಬಳಿ ಕಳೆದ ಜ. 5 ರಂದು ಸಂಜೆ 6.15ರ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಸೈಕಲ್ ಸವಾರ ಮಂಗಳವಾರ ಮೃತಪಟ್ಟಿದ್ದಾರೆ.
ಮೃತ ಸೈಕಲ್ ಸವಾರ 60 ವರ್ಷ ವಯಸ್ಸಿನವರಾಗಿದ್ದು, ಅವರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಅಪರಿಚಿತ ವಾಹನ ಡಿಕ್ಕಿಹೊಡೆದು ಗಾಯಗೊಂಡಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಕಾಲ ತುರ್ತು ನಿಗಾ ಘಟಕದಲ್ಲಿ ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಎರಡೂ ಪ್ರಕರಣಗಳನ್ನು ದಾಖಲಿಸಿರುವ ಬ್ಯಾಟರಾಯನಪುರ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸೌಮ್ಯರಾಣಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
