ಬೆಂಗಳೂರು
ಲೋಕಸಭೆ ಚುನಾವಣೆಗಾಗಿ ಬಿಜೆಪಿ ನಾಯಕರು ವೇದಿಕೆ ಅಣಿಗೊಳಿಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ 28 ಕ್ಷೇತ್ರಗಳ ಮಾಹಿತಿಗಳನ್ನು ಕಲೆಹಾಕುತ್ತಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ.
ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿದ್ದು, ಹೀಗಾಗಿ ಅವರು ಪ್ರತಿನಿಧಿಸುತ್ತಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದತ್ತ ಹಲವರ ಕಣ್ಣು ನೆಟ್ಟಿದೆ.
ಸದಾನಂದಗೌಡರು ತಮ್ಮ ತವರು ಕ್ಷೇತ್ರ ಉಡುಪಿ ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದಾರೆ ಎನ್ನುವ ಮಾತುಗಳು ಸ್ತತಃ ಬಿಜೆಪಿ ಪಡಸಾಲೆಯಲ್ಲಿದೆ. ಇದೀಗ ಅವರು ಆಯ್ಕೆಯಾಗಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ತಮಗೆ ಅವಕಾಶ ನೀಡಬೇಕೆಂದು ಶಿಕ್ಷಣ ತಜ್ಞ ಚಂದ್ರಶೇಖರ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಗೆ ಮನವಿ ಮಾಡಿದ್ದಾರೆ. ಚಂದ್ರಶೇಖರ್ ಕೆಲವು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕೋರಿದ್ದರು.
ಚಂದ್ರಶೇಖರ್ ನಗರದ ಬಿಜೆಪಿ ಕಚೇರಿಗೆ ಇಂದು ತೆರಳಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವೇಳೆ ತಮ್ಮ ಹೆಸರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಮನವಿಗೆ ಪ್ರತಿಕ್ರಯಿಸಿದ ಯಡಿಯೂರಪ್ಪ, ಮೊದಲಿಗೆ ಪಕ್ಷದ ಕಡೆಯಿಂದ ಸಮೀಕ್ಷೆ ಮಾಡಿಸಿದ ನಂತರ ಅಭ್ಯರ್ಥಿಗಳ ಆಯ್ಕೆ ಮಾಡುವುದಾಗಿ ತಿಳಿಸಿದ್ದಾರೆ.
ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟಿಕೆಟ್ ಆಕಾಂಕ್ಷಿ ಡಾ.ಚಂದ್ರಶೇಖರ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗಲು ಇಚ್ಛಿಸಿದ್ದು, ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸ್ಪರ್ಧೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ, ಅವರು ಕೂಡ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವುದು ಬಿಜೆಪಿ ಕಾರ್ಯಕರ್ತರ ಮನಸ್ಸಿನಲ್ಲಿದ್ದು, ಅದನ್ನು ಸಕಾರ ಮಾಡಲು ಪಣ ತೊಡುತ್ತೇನೆ ಎಂದರು.
ತಾವು ರಾಜ್ಯ ರೈತ ಮೋರ್ಚಾದ ಸಂಚಾಲಕ ಹಾಗು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯನಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವ ತಮ್ಮ ಅಪೇಕ್ಷೆಗೆ ನಾಯಕರು ಮನ್ನಣೆ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ