ದಾವಣಗೆರೆ:
ಹಾವೇರಿಯಲ್ಲಿ ಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರಿಗೆ ರೈತರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ತಿಳಿಸಿದ್ದಾರೆ.
2008ರಲ್ಲಿ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ರೈತರ ಶಾಲು ಹೊದ್ದುಕೊಂಡು ಪ್ರಮಾಣ ವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಂಡ ಹತ್ತು ದಿನಗಳಲ್ಲೇ ಹಾವೇರಿ ಜಿಲ್ಲೆಯಲ್ಲಿ ಗೊಬ್ಬರ ಮತ್ತು ಬಿತ್ತನೆ ಬೀಜ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿದ ಕಾರಣ ಇಬ್ಬರು ರೈತರು ಹತರಾಗಿದ್ದು ಸಾರ್ವಜನಿಕರಿಗೆ ತಿಳಿದಿರುವ ವಿಷಯವಾಗಿದೆ. ಅದೇ ಯಡಿಯೂರಪ್ಪನವರು ಈಗ ರೈತ ಪರ ಎಂದು ಹೇಳಿಕೊಂಡು ಹೊಸ ಪಾತ್ರ ಮಾಡಲು ಹೊರಟಿರುವುದು ಹಾಸ್ಯಸ್ಪದವೆಂದು ಅವರು ಲೇವಡಿ ಮಾಡಿದ್ದಾರೆ.
ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾದ ಬಾಕಿ ಹಣಕ್ಕಾಗಿ ಕಬ್ಬು ಬೆಳೆದ ರೈತರು ಮುಷ್ಕರ ನಡೆಸುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ಮೈತ್ರಿ ಸರ್ಕಾರದ ಕಾಂಗ್ರೆಸ್, ಜೆಡಿಎಸ್ ಸಚಿವರುಗಳು ಮಂಗಳವಾರ ಇಡೀ ದಿನ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಕಬ್ಬು ಬೆಳೆಗಾರರ ಹೋರಾಟದಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದಾರೆ. ಹೀಗೆ ರೈತರ ಬಗ್ಗೆ ಮೊಸಳೆ ಕಣ್ಣಿರು ಸುರಿಸುವ ಬದಲು ಕೇಂದ್ರದಿಂದ ರಾಜ್ಯದ ರೈತರಿಗೆ ಆಗಬೇಕಾಗಿರುವ ಸಾಲಮನ್ನಾ, ಕಳಸ ಬಂಡೂರಿ ಯೋಜನೆ ಸೇರಿದಂತೆ ರೈತಪರ ವಿಚಾರಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಂದೆ ಹೋಗಿ ಧರಣಿ ನಡೆಸಲಿ ಎಂದು ಸಲಹೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ