ಬೆಂಗಳೂರು:
ಮೈತ್ರಿ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಪ್ರಜಾಸತ್ತಾತ್ಮಕವಾಗಿ ರಚನೆಯಾಗಿದ್ದ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿಯವರು ಸರ್ಕಾರ ರಚನೆ ಮಾಡಿದರು. ಆದರೆ ಯಡಿಯೂರಪ್ಪರ ಸರ್ಕಾರ ನೆರೆ ಸಂತ್ರಸ್ತರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ.ಮನೆ ಕಟ್ಟಿಕೊಡಲು ಸಾಧ್ಯವಾಗಿಲ್ಲ. ಕೊರೋನ ವಿಚಾರದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ ಸಂಪೂರ್ಣ ಸಹಕಾರ ಕೊಟ್ಟಿದೆ. ಆದರೂ ಅದನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.
ಪ್ರವಾಹ ಬಂದಾಗ ರೈತರಿಗೆ ಸಮರ್ಪಕವಾಗಿ ಸೌಲಭ್ಯ ಒದಗಿಸಲಿಲ್ಲ.ಸರ್ಕಾರ ಜನರಿಗೆ ಕೊಟ್ಟ ವಾಗ್ದಾನಗಳನ್ನು ಪೂರ್ತಿ ಮಾಡಲಿಲ್ಲ. ಕೇಂದ್ರದಿಂದ ಪರಿಹಾರ ತರುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಆಂಬ್ಯುಲೆನ್ಸ್ ಕೊರತೆಯಿದ್ದು, ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಒಂದು ವರ್ಷದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ ಕುಂಠಿತಗೊಂಡಿದೆ ಎಂದರು.
ಕೋವಿಡ್ ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕೊರೋನಾದಿಂದ ಪಾರಾಗಲು ನಮ್ಮ ಪಕ್ಷ ಬೆಂಬಲ ಕೊಟ್ಟಿತ್ತಾದರೂ ಸರ್ಕಾರ ಸರ್ಕಾರ ಪೂರ್ವಭಾವಿ ತಯಾರಿ ಮಾಡಿಕೊಳ್ಳಲಿಲ್ಲ. ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡುವಲ್ಲಿ ವಿಫಲವಾಗಿದೆ. ಕೋವಿಡ್ ಉಪಕರಣಗಳ ಖರೀದಿಯಲ್ಲಿ ಹಗರಣದ ಮಾಡಿದೆ ಎಂದು ಆರೋಪಿಸಿದರು.ಕೇಂದ್ರಲ್ಲಿ ಸಂವಿಧಾನ ವಿರೋಧಿ ಕೆಲಸಗಳು ನಡೆಯುತ್ತಿದ್ದು, ರಾಜಸ್ಥಾನದಲ್ಲಿ ಸರ್ಕಾರ ಉರುಳಿಸಲು ಬಿಜೆಪಿ ಹೊಂಚು ಹಾಕುತ್ತಿದೆ. ಆದರೆ ಬಿಜೆಪಿ ತನ್ನ ಪ್ರಯತ್ನದಲ್ಲಿ ಯಶಸ್ವಿ ಆಗುವುದಿಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/Eshwar-Khandre-Pressmeet-2.gif)