ಚಿತ್ರದುರ್ಗ:
ಸಾಮಾಜಿಕ ಕಳಕಳಿಯುಳ್ಳ ಎ.ನಾರಾಯಣಸ್ವಾಮಿಯನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ.ಅಭ್ಯರ್ಥಿಯಾಗಿ ಪಕ್ಷದ ವರಿಷ್ಟರು ಕಣಕ್ಕಿಳಿಸಿರುವುದರಿಂದ ಕಾರ್ಯಕರ್ತರು ಹಾಗೂ ಮುಖಂಡುರಗಳಿಗೆ ಅತೀವ ಸಂತೋಷವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಗೆಲುವು ನಮ್ಮದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಅನೇಕಲ್ ನಾರಾಯಣಸ್ವಾಮಿ ನಾಯಕನಹಟ್ಟಿಯ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಪಾಲ್ಗೊಂಡು ದರ್ಶನ ಪಡೆದು ಪ್ರಥಮ ಬಾರಿಗೆ ಬಿಜೆಪಿ.ಕಚೇರಿಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಿಂದೆಂದೂ ಕಾಣದ ರೀತಿಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದರು.
ಸಾಮಾಜಿಕ ಕಳಕಳಿಯುಳ್ಳ ಎ.ನಾರಾಯಣಸ್ವಾಮಿಗೆ ಸ್ಪರ್ಧಿಸಲು ಟಿಕೇಟ್ ನೀಡಿರುವುದು ಜಿಲ್ಲಾ ಬಿಜೆಪಿ.ಯಲ್ಲಿ ಸಂತಸ ಮೂಡಿಸಿದೆ. ನಾಲ್ಕು ಬಾರಿ ಶಾಸಕರಾಗಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸಮಾಜ ಕಲ್ಯಾಣ ಸಚಿವರಾಗಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಸಿಮೆಂಟ್ ರಸ್ತೆ ಮಾಡಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರಿಗೆ ಅನೇಕಲ್ ನಾರಾಯಣಸ್ವಾಮಿ ಅಭ್ಯರ್ಥಿಯಾಗಿರುವುದು ಖುಷಿಯಾಗಿದೆ. ನಾಲ್ಕುವರೆ ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಪ್ರಧಾನಿ ನರೇಂದ್ರಮೋದಿ ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಎತ್ತರಕ್ಕೆ ತೆಗೆದುಕೊಂಡು ಹೋಗಿರುವುದಲ್ಲದೆ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ಜನರಿಗೆ ಮೆಚ್ಚುಗೆಯಾಗಿರುವುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದೆಲ್ಲೆಡೆ ಬಿ.ಜೆಪಿ.ಅಲೆಯಿರುವುದರಿಂದ ಬಿಜೆಪಿ.ಅಭ್ಯರ್ಥಿಗೆ ಗೆಲುವು ಸುಲಭವಾಗಲಿದೆ ಎಂದರು.
ಬಿಜೆಪಿ. ಟಿಕೇಟ್ ಆಕಾಂಕ್ಷಿಗಳು ಹೆಚ್ಚಾಗಿದ್ದರೂ ಸಹ ಎ.ನಾರಾಯಣಸ್ವಾಮಿ ಯಾವುದೇ ಒತ್ತಡವಿಲ್ಲದೆ ಟಿಕೇಟ್ ಪಡೆದುಕೊಂಡಿದ್ದಾರೆ. ಶಿಸ್ತಿನ ಸಿಪಾಯಿಯಿದ್ದಂತೆ. ಕಳೆದ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರವನ್ನು ಬಿಜೆಪಿ.ಕಳೆದುಕೊಂಡಿತು. ಅದಕ್ಕಾಗಿ ಈ ಚುನಾವಣೆಯಲ್ಲಿ ಎ.ನಾರಾಯಣಸ್ವಾಮಿಯನ್ನು ಗೆಲ್ಲಿಸಿ ಪಾರ್ಲಿಮೆಂಟ್ಗೆ ಕಳಿಸಿ ನರೇಂದ್ರಮೋದಿಯನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡಬೇಕಾಗಿರುವುದರಿಂದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.
ವಿಭಾಗೀಯ ಸಹ ಪ್ರಭಾರಿ ಜಿ.ಎಂ.ಸುರೇಶ್ ಮಾತನಾಡಿ ಚುನಾವಣೆಗೆ ಇನ್ನು ಕೇವಲ 25 ದಿನಗಳ ಕಾಲಾವಕಾಶ ವಿರುವುದರಿಂದ ಕಾರ್ಯಕರ್ತರು ನಿಮ್ಮ ನಿಮ್ಮ ವ್ಯಾಪ್ತಿಯಲ್ಲಿ ಬಿಜೆಪಿ.ಸಾಧನೆಯನ್ನು ಜನರಿಗೆ ತಿಳಿಸುವ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ.ನಾರಾಯಣಸ್ವಾಮಿಯನ್ನು ಗೆಲ್ಲಿಸಿಕೊಳ್ಳಬೇಕು ಎಂದು ಕೋರಿದರು.
ಬಿಜೆಪಿ.ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್ ಮಾತನಾಡುತ್ತ ಈಗಾಗಲೆ 250 ಕ್ಕೂ ಹೆಚ್ಚು ಬೂತ್ಗಳಲ್ಲಿ ಸಭೆ ನಡೆಸಲಾಗಿದೆ. ದೇಶದೆಲ್ಲೆಡೆ ಮೋದಿ ಅಲೆ ಎದ್ದಿರುವುದರಿಂದ ಎ.ನಾರಾಯಣಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ.ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ಮುರಳಿ, ರತ್ನಮ್ಮ, ಬಿಜೆಪಿ.ಸ್ಲಂ ಮೋರ್ಚ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ಯಾದವ್, ನಗರಾಧ್ಯಕ್ಷ ತಿಪ್ಪೇಸ್ವಾಮಿ, ವಕ್ತಾರ ನಾಗರಾಜ್ಬೇದ್ರೆ, ರಾಜ್ಯ ಪರಿಷತ್ ಸದಸ್ಯ ವೆಂಕಟಸ್ವಾಮಿ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ಶ್ಯಾಮಲ ಶಿವಪ್ರಕಾಶ್, ಓ.ಬಿ.ಸಿ.ಮೋರ್ಚ ಜಿಲ್ಲಾಧ್ಯಕ್ಷ ಸಂಪತ್ಕುಮಾರ್ ಸೇರಿದಂತೆ ಪಕ್ಷದ ಅಪಾರ ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ