ಬೆಂಗಳೂರು
ವಿಧಾನಸಭೆಯಲ್ಲಿ ಸಂಖ್ಯಾಬಲವಿಲ್ಲದ ಕಾರಣ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ರಾಜ್ಯಸಭಾ ಚುನಾವಣೆಯ ಕಣದಿಂದ ಹಿಂದೆ ಸರಿದಿದ್ದು, ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಅವರ ಗೆಲುವು ಖಚಿತವಾಗಿದೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕಡೆಯದಿನವಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಯಾರೊಬ್ಬರೂ ಉಮೇದುವಾರಿಕೆ ಸಲ್ಲಿಸಿಲ್ಲ. ಮಧ್ಯಾಹ್ನ 3 ರವರೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ಅವಕಾಶವಿತ್ತು. ಆದರೆ ಸಂಖ್ಯಾಬಲದ ಕೊರತೆ ಕಾರಣ ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಚುನಾವಣಾ ಕಣದಿಂದ ಹಿಂದೆ ಸರಿದಿವೆ.
ಕೆ.ಸಿ.ರಾಮಮೂರ್ತಿ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 12 ಕ್ಕೆ ಮತದಾನ ನಡೆಯಲಿದೆ. ರಾಜ್ಯಸಭೆಯ ಈ ಸ್ಥಾನಕ್ಕೆ ಕಾಂಗ್ರೆಸ್ನಿಂದ ಯಾರೂ ಸ್ಪರ್ಧಿಸಲು ಮುಂದೆ ಬಂದಿಲ್ಲ.ಅಲ್ಲದೇ ಜೆಡಿಎಸ್ನಿಂದಲೂ ಯಾವುದೇ ಅಭ್ಯರ್ಥಿ ಕಣಕ್ಕಿಳಿದಿಲ್ಲ.
ಈ ಎರಡೂ ಪಕ್ಷಗಳಿಂದ ನಾಮಪತ್ರ ಸಲ್ಲಿಕೆ ಆಗಿಲ್ಲ ಎಂದು ವಿಧಾನಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಸ್ಪಷ್ಟಪಡಿಸಿದ್ದಾರೆ.ಈ ಮೊದಲು ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಕೇಳಿಬಂದಿತ್ತಾದರೂ ಸಂಖ್ಯಾಬಲವಿಲ್ಲದ ಕಾರಣ ಅವರು ಸ್ಪರ್ಧಿಸಲು ಮನಸು ಮಾಡಲಿಲ್ಲ.
ಮೂವರು ಅಭ್ಯರ್ಥಿ ಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಸ್ವತಂತ್ರ ಅಭ್ಯರ್ಥಿ ಯಾಗಿ ಕೆ. ಪದ್ಮರಾಜ, ವೆಂಕಟೇಶ್ವರ ಮಹಾಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಕೆ.ಸಿ ರಾಮಮೂರ್ತಿ ಬಿಜೆಪಿಯ ಅಭ್ಯರ್ಥಿಯಾಗಿದ್ದು ಅವರ ಗೆಲುವು ಖಚಿತ.ಇಬ್ಬರು ಸ್ವತಂತ್ರ ಅಭ್ಯರ್ಥಿಗಳಿಗೆ ಅನುಮೋದಕರು ಇಲ್ಲ.ಮಂಗಳವಾರ ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಡಿಸೆಂಬರ್ 5 ಕಡೆಯ ದಿನವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/k-c-ramamurthy-78f856e5-c3e6-495d-9e6f-782a9fe774a-resize-750.gif)