ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು ..!!

ಬೆಂಗಳೂರು

   ಜಾಲಹಳ್ಳಿಯ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ಬಳಿ ನಿನ್ನೆ ರಾತ್ರಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್‍ನಲ್ಲಿ ಹೋಗುತ್ತಿದ್ದ ಹೊಟೇಲ್ ಮ್ಯಾನೇಜ್‍ಮೆಂಟ್ ವಿದ್ಯಾರ್ಥಿಯೊಬ್ಬ ಮೃತಪಟ್ಟರೆ, ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

    ನೇಪಾಳ ಮೂಲದ ಉತ್ಸವ್ ಪಂಡಿತ್ (21)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಗಾಯಗೊಂಡಿರುವ ಸೂರಜ್ ಚೌಧರಿ (21) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪೀಣ್ಯಾದ ಆಚಾರ್ಯ ಇನ್ಸ್ಟಿಟ್ಯೂಟ್‍ನಲ್ಲಿ ಹೊಟೇಲ್ ಮ್ಯಾನೇಜ್‍ಮೆಂಟ್‍ನ 7ನೇ ಸೆಮಿಸ್ಟರ್‍ನಲ್ಲಿ ಓದುತ್ತಿದ್ದ ಉತ್ಸವ್ ಪಂಡಿತ್ ಹಾಗೂ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಸೂರಜ್ ಚೌಧರಿ ಸ್ನೇಹಿತರಾಗಿದ್ದು, ಇಬ್ಬರೂ ಕಿರ್ಲೋಸ್ಕರ್ ಬಡಾವಣೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದರು.

     ಬಾಡಿಗೆ ಮನೆಯನ್ನು ಬದಲಾವಣೆ ಮಾಡಿ ಸೋಲದೇವನಹಳ್ಳಿಗೆ ಹೋಗಲು ರಾತ್ರಿ 7ರ ವೇಳೆ ಸ್ಕೂಟರ್‍ನಲ್ಲಿ ಇಬ್ಬರೂ ಹೆಲ್ಮೆಟ್ ಧರಿಸದೆ, ಹೋಗುತ್ತಿದ್ದಾಗ ಮಾರ್ಗಮಧ್ಯೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಉತ್ಸವ್ ಪಂಡಿತ್, ಬಾಡಿಗೆಗೆ ಇದ್ದ ಮನೆ ಮಾಲೀಕನ ಸ್ಕೂಟರ್ ತೆಗೆದುಕೊಂಡು ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಹೆಲ್ಮೆಟ್ ಧರಿಸದಿದ್ದರಿಂದ ಅಪಘಾತದ ರಭಸಕ್ಕೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

      ಪ್ರಕರಣ ದಾಖಲಿಸಿರುವ ಜಾಲಹಳ್ಳಿ ಸಂಚಾರ ಪೊಲೀಸರು, ಬಸ್ ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸೌಮ್ಯಲತಾ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link