ಹರಪನಹಳ್ಳಿ:
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಆಗ್ರಹಿಸಿ ತಾಲ್ಲೂಕಿನ ಮೈದೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಪಿಡಿಒ ಅವರಿಗೆ ಗ್ರಾಮಸ್ಥರು ಘೇರಾವ್ ಹಾಕಿದ ಘಟನೆ ಮಂಗಳವಾರ ಜರುಗಿದೆ.
ಖಾಲಿ ಕೊಡ ಹಾಗೂ ನೀರು ತರುವ ಗಾಡಿಗಳೊಂದಿಗೆ ಆಗಮಿಸಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಬಾಗಿಲಿಗೆ ಅಡ್ಡವಾಗಿಟ್ಟು ಧರಣಿ ಕುಳಿತುಕೊಂಡರು. ಎರಡು ತಿಂಗಳ ಹಿಂದೆ ಹೊಸದಾಗಿ ಕೊರೆಯಿಸಲಾದ ಕೊಳವೆಬಾವಿಗೆ ಮೋಟಾರ್ ಅಳವಡಿಸಿ ನೀರು ನೀಡಲು ಮೀನಾಮೇಷ ಏಣಿಸುತ್ತಿದ್ದಾರೆ. ನೀರು ಸರಬರಾಜು ಮಾಡುವವರಿಗೂ ಪಂಚಾಯ್ತಿಯಿಂದ ನಿಮ್ಮನ್ನು ಹೊರಗೆ ಬಿಡುವುದಿಲ್ಲ ಎಂದು ಪ್ರತಿಭಟನಾನಿರತರು ಪಟ್ಟು ಹಿಡಿದರು.
ಗ್ರಾಮದಲ್ಲಿ ಹಲವು ತಿಂಗಳುಗಳಿಂದ ನೀರಿನ ಸಮಸ್ಯೆ ತೀವ್ರ ಉಲ್ಬಣಗೊಂಡಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒ ಅವರಿಗೆ ಹಲವಾರು ಬಾರಿ ಮನವಿ ಮಾಡಿದರೂ ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ. ಜನರು ನೀರಿಗಾಗಿ ಪರಿತಪಿಸುವಂತಾಗಿದೆ. ಎಲ್ಲ ಕೆಲಸ-ಕಾರ್ಯಗಳನ್ನು ಬದಿಗೊತ್ತಿ ನೀರಿಗಾಗಿ ಹುಡುಕಾಟ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಈ ಮೊದಲು ಖಾಸಗಿ ಕೊಳವೆ ಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿತ್ತು. ಮಾಲೀಕರಿಗೆ ನೀರಿನ ಬಾಡಿಗೆ ಪಾವತಿ ಮಾಡದೇ ಇರುವುದರಿಂದ ಅವರು ನೀರು ಕೊಡುವುದನ್ನು ನಿಲ್ಲಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ಮತ್ತಷ್ಟು ನೀರಿನ ಸಮಸ್ಯೆ ತೀವ್ರಗೊಂಡಿದೆ. ಶೀಘ್ರವೇ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಚಿಗಟೇರಿ ಪೊಲೀಸರು, ಅಧ್ಯಕ್ಷರು, ಪಿಡಿಒ ಹಾಗೂ ಗ್ರಾಮಸ್ಥರ ಮನವೊಲಿಸಿದರು. ಈ ಮಧ್ಯೆ ಪೊಲೀಸ್ ನೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಹದಿನೈದು ದಿನದೊಳಗೆ ನೀರು ಪೂರೈಸಲು ಪಂಚಾಯ್ತಿ ಅವರು ಒಪ್ಪಿಗೆ ಸೂಚಿಸಿದರು. ಸಂಧಾನದ ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.ಈ ಸಂದರ್ಭದಲ್ಲಿ ನೀಲಮ್ಮ, ಕೆಂಚಮ್ಮ, ರೇಖಮ್ಮ, ತಾತೇಶ್, ಕುಬೇರಪ್ಪ, ಬಸಣ್ಣ, ನಾಗರಾಜ ಸೇರಿದಂತೆ ಗ್ರಾಮಸ್ಥರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
