ಬೆಂಗಳೂರು
ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ಸ್ವ ಕ್ಷೇತ್ರ ರಾಮನಗರದಲ್ಲಿ ಗೆಲುವು ಸಾಧಿಸಬೇಕಾಗಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮುಂದೂಡುವ ಸಾಧ್ಯತೆ ದಟ್ಟವಾಗಿದೆ.
ತೈಲ ದರಗಳ ಏರಿಕೆ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರಗಳನ್ನು ಹೆಚ್ಚಿಸಲು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಮುಂದಾಗಿದ್ದರು. ಶೇ 18 ರಂದು ದರ ಏರಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಇದೀಗ ರಾಜ್ಯದಲ್ಲಿ ಮಿನಿ ಚುನಾವಣೆ ಎದುರಾಗಿದ್ದು, ಈ ಸಂದರ್ಭದಲ್ಲಿ ದರ ಏರಿಕೆ ಸೂಕ್ತವಲ್ಲ ಎನ್ನುವ ನಿಲುವಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ದರ ಏರಿಕೆಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಸಾರಿಗೆ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಈಗಿನ ಮಟ್ಟಿಗೆ ಒಂದು ತಿಂಗಳ ಹಿಂದೆ ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್ ಮೇಲೆ 2 ರೂ. ಸೆಸ್ ಪ್ರಮಾಣವನ್ನು ಕಡಿಮೆ ಮಾಡಿತ್ತು. ಇದಾದ ನಂತರ ಇತ್ತೀಚೆಗೆ ಕೇಂದ್ರ ಸರ್ಕಾರ 2.50 ರೂ. ದರವನ್ನು ಕಡಿಮೆ ಮಾಡಿರುವುದರಿಂದ ಅಲ್ಪ ಮಟ್ಟಿಗೆ ನಷ್ಟ ಕಡಿಮೆಯಾದರೂ ಒಂದೂವರೆ ತಿಂಗಳಿನಿಂದ ಲೀಟರ್ ಡೀಸೆಲ್ಗೆ 20 ರೂ.ಗಿಂತ ಹೆಚ್ಚಳವಾಗಿರುವುದು ನಿಗಮಗಳು ನಷ್ಟ ಅನುಭವಿಸಲು ಕಾರಣವಾಗಿದೆ. ಒಟ್ಟಾರೆ ರಾಜ್ಯ ಸರ್ಕಾರ ಈ ವಿಷಯದಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಆಗದಂತಹ ಪರಿಸ್ಥಿತಿ ಇದ್ದು ಮುಂದಿನ ತಿಂಗಳು ಉಪ ಚುನಾವಣೆಯ ಫಲಿತಾಂಶ ಬಂದ ನಂತರ ಪ್ರಯಾಣ ದರ ಏರಿಕೆಯಾಗುವ ಎಲ್ಲ ಸಾಧ್ಯತೆಗಳಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ