ಬೆಂಗಳೂರು
ಸಚಿವಾಕಾಂಕ್ಷಿ ಶಾಸಕರುಗಳಿಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಿಸುವ ಇಂಗಿತ ವ್ಯಕ್ತಪಡಿಸಿದ್ದು, ಮುಂದಿನವಾರ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರೊಡನೆ ಚರ್ಚೆ ನಡೆಸಿ ಮೂಹೂರ್ತ ನಿಗದಿ ಮಾಡುವುದಾಗಿ ಹೇಳಿದರು.
ನೂತನ ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸಂಪುಟ ವಿಸ್ತರಣೆಯಲ್ಲಿ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.ವಿಧಾನ ಸೌಧದಲ್ಲಿಂದು ನಡೆದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸಂಪುಟವನ್ನು ಆದಷ್ಟು ಬೇಗ ವಿಸ್ತರಿಸುವ ಅಭಿಲಾಷೆ ತಮ್ಮದು. ವರಿಷ್ಠರು ಮುಂದಿನವಾರ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.ದೆಹಲಿಗೆ ತೆರಳಿ ವರಿಷ್ಠರೊಡನೆ ಚರ್ಚಿಸಿ ಸಂಕ್ರಾಂತಿ ಹೊತ್ತಿಗೆ ಸಂಪುಟ ವಿಸ್ತರಣೆ ಮಾಡಲಾಗುವುದುಎಂದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಪೌರತ್ವ ತಿದ್ದುಪಡಿಕಾಯ್ದೆಯಿಂದ ದೇಶದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆ ಬಾಧಕಗಳು ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ವ್ಯವಸ್ಥಿತ ಷಡ್ಯಂತರ ನಡೆಸಿದೆ.ದೇಶದಲ್ಲಿ ನಡೆದಿರುವ ಪ್ರತಿಭಟನೆ-ಗಲಭೆಗಳ ಹಿಂದೆ ಕಾಂಗ್ರೆಸ್ನ ಕೈವಾಡವಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರೇ ಈ ಪ್ರತಿಭಟನೆಯ ನೇತೃತ್ವ ವಹಿಸುವುದಾಗಿ ಹೇಳಿದ್ದಾರೆ. ಹಾಗಾಗಿ, ದೇಶದಲ್ಲಿ ನಡೆದಿರುವ ಪ್ರತಿಭಟನೆಗಳ ಹಿನ್ನೆಲೆಗಾಯಕರು ಯಾರು ಎಂಬುದು ಈಗ ಜಗಜ್ಜಾಹೀರಾಗಿದೆ. ಕಾಂಗ್ರೆಸ್ನವರ ಕುಮ್ಮಕ್ಕಿನಿಂದಲೇ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ ಎಂದವರು ಹರಿಹಾಯ್ದರು.