ಬೆಂಗಳೂರು
ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದವರ ಬಂಧನದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ 41 ಸಾವಿರ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಯಶವಂತಪುರದ ತ್ರಿವೇಣಿ ರಸ್ತೆಯ ವಿನಯ್ಕುಮಾರ್ (33) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 41 ಸಾವಿರ ನಗದು, ಮೊಬೈಲ್, ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.ಯಶವಂತಪುರದ ತ್ರಿವೇಣಿ ರಸ್ತೆಯ ಮನೆಯೊಂದರಲ್ಲಿ ಆರೋಪಿಯು ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಣ ಏಕದಿನ ಕ್ರಿಕೆಟ್ ಪಂದ್ಯಕ್ಕೆ ಸೋಲು ಗೆಲುವಿನ ಬಗ್ಗೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಕಲ್ಯಾಣ ಮಟ್ಕಾ
ವಿವೇಕ ನಗರ ಮುಖ್ಯರಸ್ತೆಯ ಎಬಿಸಿ ಗ್ರೌಂಡ್ನಲ್ಲಿ ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಜೂಜಾಟವಾಡುತ್ತಿದ್ದ 8 ಮಂದಿಯನ್ನು ಬಂಧಿಸಲಾಗಿದೆ.
ಯಶವಂತಕುಮಾರ್ (22), ಸಂದೀಪ್ (24), ಕೃಷ್ಣಪ್ಪ (53), ರಾಜ (49), ವೇಣುಗೋಪಾಲ್ (39), ಸುರೇಶ್ (32), ಪಾಪಯ್ಯ (46), ವೀರಸ್ವಾಮಿ (60), ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರಿಂದ 14,700 ನಗದು, 16 ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡು ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








