ತುಮಕೂರು
ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಹಿನ್ನಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯಲು ತುಮಕೂರು ಜಿಲ್ಲೆಯಲ್ಲಿ ಸ್ಥಾಪಿಸಿರುವ ಚೆಕ್ಪೋಸ್ಟ್ಗಳಿಗೆ ನಿನ್ನೆ ತಡರಾತ್ರಿ ಚುನಾವಣಾ ಮಾದರಿ ನೀತಿ ಸಂಹಿತೆ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ತುಮಕೂರು ತಾಲ್ಲೂಕು ಊರ್ಡಿಗೆರೆಯಲ್ಲಿ ಸ್ಥಾಪಿಸಿರುವ ಚೆಕ್ಪೋಸ್ಟ್, ಕ್ಯಾತ್ಸಂದ್ರ ಜಾಸ್ಟೋಲ್ಗೇಟ್ ಚೆಕ್ಪೋಸ್ಟ್ ಹಾಗೂ ಕುಣಿಗಲ್ ರಿಂಗ್ ರಸ್ತೆಯಲ್ಲಿರುವ ಚೆಕ್ಪೋಸ್ಟ್ಗಳಿಗೆ ತೆರಳಿದ ಸಿಇಓ ಶುಭಾ ಕಲ್ಯಾಣ್ ಅವರು ಚೆಕ್ಪೋಸ್ಟ್ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಖುದ್ದು ತಪಾಸಣೆ ನಡೆಸಿದರು.
ಚೆಕ್ಪೋಸ್ಟ್ಗಳಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು, ಸಿಸಿಟಿವಿಗಳ ಕಾರ್ಯನಿರ್ವಹಣೆ, ವಾಹನ ತಪಾಸಣಾ ರಿಜಿಸ್ಟರ್, ಪಾಳಿಯಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಆ ಸಿಬ್ಬಂದಿಗಳ ಪಾಳಿ ಹಾಜರಾತಿ ಎಲ್ಲವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದರು.
ಚೆಕ್ಪೋಸ್ಟ್ ಮೂಲಕ ಹಾದು ಹೋಗುವ ಎಲ್ಲಾ ವಾಹನಗಳನ್ನು ತಪ್ಪದೇ ತಪಾಸಣೆ ನಡೆಸಿ, ಯಾವುದೇ ಕಾರಣಕ್ಕೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಚೆಕ್ಪೋಸ್ಟ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು ಧರಿಸಿರಬೇಕು. ಅಲ್ಲದೆ ಕಣ್ಗಾವಲು ಪಡೆ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ರೇಡಿಯಂ ಜಾಕೆಟ್ಗಳನ್ನು ಧರಿಸುವಂತೆ ಸೂಚಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








