ರಾಣೇಬೆನ್ನೂರು
ಮಕ್ಕಳು ನಮ್ಮ ಸಮಾಜದ ಆಸ್ತಿ, ಶಿಕ್ಷಣ ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದ್ದ ಮಕ್ಕಳು ಬಾಲ್ಯ ವಿವಾಹದಂತಹ ಅನಿಷ್ಠ ಪದ್ದತಿಗಳಿಗೆ ಬಲಿಯಾಗುತ್ತಿದ್ದಾರೆ, ಪ್ರತಿಯೊಬ್ಬ ಪಾಲಕ/ಪೋಷಕರು ಬಾಲ್ಯ ವಿವಾಹದಿಂದ ಮಗುವಿನ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ ಬಾಲ್ಯ ವಿವಾಹಗಳು ನಿರ್ಮೂಲನೆಯಾಗಲು ಸಾಧ್ಯ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್.ಹೆಚ್. ಮಜೀದ್ ಹೇಳಿದರು
ಅವರು ಮಕ್ಕಳ ಸಹಾಯವಾಣಿ ಕೇಂದ್ರ ಹಾವೇರಿ, ಮಕ್ಕಳ ರಕ್ಷಣಾ ಘಟಕ ಹಾವೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ರಾಣೇಬೆನ್ನೂರು ಮತ್ತು ಗ್ರಾಮ ಪಂಚಾಯತಿ ಮಾಕನೂರು ಇವರ ಸಹಯೋಗದಲ್ಲಿ ನಡೆದ “ಬಾಲ್ಯವಿವಾಹ ತಡೆಗಟ್ಟುವ ಕುರಿತು ಬೃಹತ್ ಜಾಗೃತಿ ಆಂದೋಲನ ಕಾರ್ಯಕ್ರಮ” ವನ್ನು ಉದ್ಘಾಟಿಸಿ ಮಾತನಾಡುತ್ತಾ ಜಿಲ್ಲೆಯಲ್ಲಿ ಬಾಲ್ಯವಿವಾಹದಂತಹ ಪ್ರಕರಣಗಳು
ಹೆಚ್ಚಾಗುತ್ತಿದ್ದು ಇದರಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ, ಇಂದು ಜನರಲ್ಲಿ ಕಾನೂನಿನ ಬಗ್ಗೆ ಸರಿಯಾದ ಅರಿವು ಇಲ್ಲದಿರುವುದರಿಂದ ಅನೇಕ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೋಸ್ಕರ ಅನೇಕ ಕಾನೂನುಗಳು ಜಾರಿಯಲ್ಲಿದ್ದರೂ ಸಹ ಇಂತಹ ಬಾಲ್ಯ ವಿವಾಹಗಳಿಂದ ಮಕ್ಕಳ ಹಕ್ಕುಗಳನ್ನು ಉಲ್ಲಂಘನೆಯಾಗುತ್ತಿವೆ , ಮಕ್ಕಳಿಗೆ ಸಂಬಂದಿಸಿದ ಇಂತಹ ಯಾವುದೇ ಸಮಸ್ಯೆಗಳಿದ್ದರೂ ಸಹ ಮಕ್ಕಳ ಸಹಾಯವಾಣಿ 1098 ಕ್ಕೆ ಉಚಿತ ಕರೆಮಾಡಿ ತಿಳಿಸಿ ಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀನಿವಾಸ ಆಲದರ್ತಿಯವರು ಮಾತನಾಡುತ್ತಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಮುಖಾಂತರ ಉತ್ತಮ ಮಾನವೀಯ ಮೌಲ್ಯಗಳನ್ನು ಬೆಳೆಸಿ ಸದೃಢ ರಾಷ್ಟ್ರ ನಿರ್ಮಾಣಮಾಡುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು, ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತುವಂತಾಗಬೇಕು ಹಾಗೂ ಸಾರ್ವಜನಿಕರಲ್ಲಿ ಮಕ್ಕಳ ಬಗ್ಗೆ ಜಾಗೃತಿ ಮೂಡಬೇಕಾದರೆ ಇಂತಹ ಕಾರ್ಯಕ್ರಮಗಳ ಹಮ್ಮಿಕೊಳ್ಳುವುದು ತುಂಬಾ ಅವಶ್ಯಕತೆ ಇದೆ ಎಂದರು.
ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ನಿಷೇಧ ಹಾಗೂ ಮಕ್ಕಳ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯದ ಕುರಿತು ಘೋಷಣೆಗಳನ್ನು ಕೂಗುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೃಹತ್ ಜಾಥಾವನ್ನು ಕೈಗೊಳ್ಳಲಾಯಿತು, ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾ ಘಟಕದ ಸಿಬ್ಬಂಧಿ ವಿನಯ್ ಗುಡಗೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಿಬ್ಬಂದಿ ಶ್ರೀಮತಿ ಮಂಜುಳ ಮತ್ತು ಜ್ಯೋತಿ ಶಿಗ್ಲಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯಿತ್ರಿ.ಎಸ್.ಹೆಚ್, ಸದಸ್ಯರಾದ ಅಶೋಕ ಬಸವಂತ, ವೈಧ್ಯಾಧಿಕಾರಿ ಡಾ|| ರುಬಿಯಾ. ಮಕ್ಕಳ ಸಹಾಯವಾಣಿಯ ಸಿಬ್ಬಂಧಿವರ್ಗ, ಶಾಲಾ ಸಿಬ್ಬಂದಿ, ಗ್ರಾಮ ಪಂಚಾಯಿತಿಯ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಹಾಗೂ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
