ತುಮಕೂರು
ಆರೋಗ್ಯದ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿಯ ಅಂಗವಾಗಿ ಮಲ್ಲಸಂದ್ರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕುಂಕುಮನಹಳ್ಳಿ, ಕೊತ್ತಿಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಗನವಾಡಿ ಕೇಂದ್ರಗಳಿಗೆ ಆರು ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರು ಬರುವುದರಿಂದ ಅಡುಗೆ ಮನೆ, ಪಾತ್ರೆ ಪರಿಕರಗಳು, ಆಹಾರ ಸಾಮಗ್ರಿಗಳು, ಕುಡಿಯುವ ನೀರಿನ ಕ್ಯಾನ್, ಮಕ್ಕಳು ಉಪಯೋಗಿಸುವ ಆಟಿಕೆ ಸಾಮಗ್ರಿಗಳು, ಚಾರ್ಟ್ಗಳು, ಶೌಚಾಲಯ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸೂಚಿಸಿದರಲ್ಲದೇ ಮಕ್ಕಳ ತಾಯಂದಿರು, ಸ್ತ್ರಿಶಕ್ತಿ ಸಂಘದ ಸದಸ್ಯರು ಹಾಗೂ ಬಾಲವಿಕಾಸ ಸಮಿತಿಯ ಸದಸ್ಯರೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್.ನಟರಾಜ್ ಮಾತನಾಡಿ, ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳು ನಿಮ್ಮ ಗ್ರಾಮದ ಮಕ್ಕಳಾಗಿರುವುದರಿಂದ ಸ್ವಚ್ಛತೆ ಕಾಪಾಡುವಲ್ಲಿ ಕೈಜೋಡಿಸಬೇಕೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಧರ್, ಮೇಲ್ವಿಚಾರಕಿ ಸುಜಾತ, ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ