ಬೆಂಗಳೂರು:
ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಮಾತನಾಡಿ, ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುವುದನ್ನು ಖುದ್ದಾಗಿ ಪರಿಶೀಲಿಸುವುದಾಗಿ ಎಚ್ಚರಿಸಿದರು.
ಇಂಜಿನಿಯರ್ ಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನಿರುದ್ಯೋಗಿ ಇಂಜಿನಿಯರ್ ಗಳನ್ನು ತರಬೇತುದಾರರೆಂದು ನೇಮಕ ಮಾಡಲು ಸಿಎಂ ಆದೇಶಿಸಿದರು.
ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು, ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಜಮೀನನ್ನು ಈಗಾಗಲೇ ಗುರುತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿದರು.
ವಿವಿಧ ಇಂಜಿನಿಯರಿಂಗ್ ಇಲಾಖೆಗಳ ದರಪಟ್ಟಿಯನ್ನು ಪರಿಶೀಲಿಸಿ ರಾಜ್ಯಾದ್ಯಂತ ಏಕರೂಪ ದರಪಟ್ಟಿಯನ್ನು ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲಿಯೇ ವರದಿ ಸಲ್ಲಿಸಲಿದ್ದಾರೆ. ಏಕರೂಪ ದರಪಟ್ಟಿ ಹೊರಬಂದಲ್ಲಿ ಇಲಾಖೆಗೆ ನೂರಾರು ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಉಳಿಸಬಹುದಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಭೆಯಲ್ಲಿ ಹೇಳಿದರು.
ರಾಜ್ಯದಲ್ಲಿ ಒಟ್ಟು 4,813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು 30,675 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಂತರ್ಜಲ ವೃದ್ಧಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಸೇತುವೆಗಳ ತಳಭಾಗದಲ್ಲಿ ಒಂದು ಮೀಟರ್ ತಡೆಗೋಡೆ ನಿರ್ಮಿಸಿ ನೀರಿನ ಸಂಗ್ರಹಣೆ ಮಾಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.
![](https://prajapragathi.com/wp-content/uploads/2020/04/BSYeidurappa.gif)