ಕಾಲೇಜು ಸ್ಥಳಾಂತರಿಸದಂತೆ ಶಾಸಕಿ ಪೂರ್ಣಿಮಾಶ್ರೀನಿವಾಸ್ ಎಚ್ಚರಿಕೆ

ಹಿರಿಯೂರು :

   ತಾಲ್ಲೂಕಿನ ಜವಗೊಂಡನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮದ್ದೂರು ತಾಲ್ಲೂಕಿನ ಕೆಸ್ತೂರಿಗೆ ಸ್ಥಳಾಂತರಿಸುವ ಆದೇಶವನ್ನು 2ದಿನದ ಒಳಗೆ ವಾಪಸ್ ಪಡೆಯಬೇಕು. ಒಂದು ವೇಳೆ ಸ್ಥಳಾಂತರಿಸಲು ಮುಂದಾದಲ್ಲಿ ಪರಿಸ್ಥಿತಿ ನೆಟ್ಟಗಿರೋದಿಲ್ಲ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಎಚ್ಚರಿಸಿದರು.

    ತಾಲ್ಲೂಕಿನ ಜವಗೊಂಡನಹಳ್ಳಿಯಲ್ಲಿ ಸೋಮವಾರ ಸ್ವಾಮಿವಿವೇಕಾನಂದ ಹಳೆಯ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾಲೇಜು ಉಳಿಸಿ ಹೋರಾಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

     ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂಬ ನೆಪವೊಡ್ಡಿ, ಕಾಲೇಜು ಮುಚ್ಚಲು ಹೊರಟರೆ ಸುಮ್ಮನಿರಲ್ಲ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರಿಗೆ, ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಸಚಿವರ ಜೊತೆ ದೂರವಾಣಿಯಲ್ಲಿ ಚರ್ಚಿಸಿದ್ದು, ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

     ಜವಗೊಂಡನಹಳ್ಳಿ ಹೋಬಳಿಯಲ್ಲಿ ನೆಲೆಸಿರುವ ಬಹುತೇಕರು ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಜಾತಿ ಪಂಗಡಕ್ಕೆ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ದೂರದ ಊರುಗಳಿಗೆ ಹೋಗಿ ಪದವಿ ಪಡೆಯುವಷ್ಟು ಆರ್ಥಿಕ ಶಕ್ತಿ ಅವರಲ್ಲಿಲ್ಲ. ಕಾಲೇಜು ಸ್ಥಳಾಂತರಗೊಂಡರೆ ವಿಶೇಷವಾಗಿ ಹೆಣ್ಣು ಮಕ್ಕಳ ಓದಿಗೆ ಕಂಟಕ ಬರುತ್ತದೆ. ನಮ್ಮ ಬೇಡಿಕೆಗೆ ಸ್ಪಂದಿಸದೇ ಹೋದಲ್ಲಿ ಮಕ್ಕಳು, ಪೋಷಕರು ಹಾಗೂ ಸಾರ್ವಜನಿಕರ ಜೊತೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

     ತಾಲ್ಲೂಕು ಪಂಚಾಯಿತಿ ಸದಸ್ಯ ಜಯರಾಮಯ್ಯ ಮಾತನಾಡಿ, ರಾಜಕೀಯ ಕಾರಣಗಳಿಗಾಗಿ ಕಾಲೇಜು ಮುಚ್ಚಲು ಹೊರಟರೆ ಅದನ್ನು ರಾಜಕೀಯವಾಗಿಯೇ ಎದುರಿಸಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ಬದುಕನ್ನು ಹಾಳು ಮಾಡಲು ನಾವು ಬಿಡುವುದಿಲ್ಲ. ಸರ್ಕಾರ ತಕ್ಷಣ ತೀರ್ಮಾನ ಕೈಗೊಳ್ಳದೇ ಹೋದಲ್ಲಿ ಹೆದ್ದಾರಿ ತಡೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

      ಕಾಲೇಜು ಸ್ಥಳಾಂತರ ಆದೇಶ ರದ್ದು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಪಾಪಣ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಖಾಲಿದ್‍ಹುಸೇನ್, ತಾಲ್ಲೂಕು ಪಂಚಾಯಿತಿ ಮಾಜಿಅಧ್ಯಕ್ಷ ಕೆ.ಮಂಜುನಾಥ್, ಒತ್ತಾಯಿಸಿದರು.ಇದೇ ಸಂದರ್ಭದಲ್ಲಿ ಶಾಸಕಿ ಪೂರ್ಣಿಮಾ ಅವರು ತಹಶೀಲ್ದಾರ್ ವೆಂಕಟೇಶಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದರು.

      ಈ ಪ್ರತಿಭಟನೆಯಲ್ಲಿ ಮುಖಂಡರುಗಳಾದ ಬಸವರಾಜನಾಯಕ್, ದ್ಯಾಮಣ್ಣ, ಮಲ್ಲೇಶ್, ಎ.ಕೃಷ್ಣಮೂರ್ತಿ, ಪಿ.ಕೃಷ್ಣಮೂರ್ತಿ, ತಿಮ್ಮರಾಯಪ್ಪ, ತಿಮ್ಮಯ್ಯ, ತಿರುಮಲ, ಕೃಷ್ಣಪ್ಪ, ವಿದ್ಯಾರ್ಥಿ, ಸಂಘದ ಅಧ್ಯಕ್ಷ ಶಿವಕುಮಾರ್, ಗುರುಮೂರ್ತಿ, ಪಾಪಿಬಾಯಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

 

Recent Articles

spot_img

Related Stories

Share via
Copy link