ಗುಬ್ಬಿ
ತುಮಕೂರು ಲೋಕಸಭಾ ಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿಗಳಾದ ಎಚ್.ಡಿ ದೇವೆಗೌಡರು ಸ್ಪರ್ಧೆ ಮಾಡಿರುವುದು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಸಂಕೇತವಾಗಿದ್ದು ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಜೆ.ಡಿ.ಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಹೆಚ್.ಆರ್.ಗುರುರೇಣುಕಾರಾಧ್ಯ ತಿಳಿಸಿದರು.
ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ಎರಡೂ ಪಕ್ಷಗಳ ಮುಖಂಡರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.2 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ತಾಲ್ಲೂಕಿನ ಹೇರೂರು ಗ್ರಾಮದ ಶ್ರೀಬಾಲಾಜಿ ಕನ್ವೆನ್ಷನ್ಹಾಲ್ನಲ್ಲಿ ಕಾಂಗ್ರೆಸ್ ಮತ್ತು ಜೆ.ಡಿ.ಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದ್ದು, ಎರಡು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪ್ರಸಕ್ತ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಸನ್ನದ್ಧರಾಗುವಂತೆ ಕರೆನೀಡಿದರು.
ಇದೆ ಮೊದಲ ಬಾರಿಗೆ ತಾಲ್ಲೂಕಿನಲ್ಲಿ ಮೈತ್ರಿ ಸರಕಾರದ ಸಭೆಯನ್ನು ಎರಡೂ ಪಕ್ಷಗಳ ಮುಖಂಡರು ಒಂದಾಗಿ ನಡೆಸುತ್ತಿದ್ದು ಸಭೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಾ:ಜಿ.ಪರಮೇಶ್ವರ್, ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ಹಾಗೂ ಜಿಲ್ಲೆಯ ಕಾಂಗ್ರೆಸ್ ಮತ್ತು ಜೆಡಿಎಸ್ನ ಎಲ್ಲಾ ಶಾಸಕರು ಆಗಮಿಸುತ್ತಿದ್ದಾರೆ. ಸಭೆಯನ್ನು ಯಶಸ್ವಿಗೊಳಿಸಲು ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರುಗೇನಹಳ್ಳಿ ನರಸಿಂಹಯ್ಯ ಮಾತನಾಡಿ, ಮುಖಂಡರು ಮತ್ತು ಕಾರ್ಯಕರ್ತರ ಸಭೆ ಮಹತ್ವದ್ದಾಗಿದ್ದು ನಮ್ಮೆಲ್ಲ ಕಾರ್ಯಕರ್ತರು ಆಗಮಿಸಬೇಕು. ಮೈತ್ರಿ ಸರಕಾರದಲ್ಲಿ ಲೋಕಸಭಾ ಅಭ್ಯರ್ಥಿಯಾಗಿರುವ ಹೆಚ್.ಡಿ.ದೇವೆಗೌಡರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಕರೆನೀಡಿದರು.
ಎಪಿಎಂಸಿ ಅಧ್ಯಕ್ಷ ಜಿ.ಟಿ.ರೇವಣ್ಣ ಮಾತನಾಡಿ, ಹೆಚ್.ಡಿ.ದೇವೆಗೌಡರು ಖಂಡಿತವಾಗಿ ಹೇಮಾವತಿ ನೀರಿನ ವಿಚಾರದಲ್ಲಿ ನಮ್ಮ ಜಿಲ್ಲೆಗೆ ಮೋಸ ಮಾಡಿಲ್ಲ. ಬೇರೆ ಪಕ್ಷದವರು ಅದನ್ನು ತಿರುಚಿ ಮಾತನಾಡುತ್ತಿದ್ದಾರೆ. ಇದು ತಪ್ಪು ಮುಂದಿನ ದಿನದಲ್ಲಿ ಗೌಡರು ಗೆದ್ದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಜೊತೆಗೆ ತಾಲ್ಲೂಕಿನ ನೀರಿನ ಸಮಸ್ಯೆ ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ. ಹಾಗಾಗಿ ತಾಲ್ಲೂಕಿನ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವುದರ ಜೊತೆಗೆ ಪ್ರಸಕ್ತ ಚುನಾವಣೆಯಲ್ಲಿ ಅಧಿಕ ಮತಗಳ ಅಂತರದಿಂದ ಗೌಡರನ್ನು ಗೆಲ್ಲಿಸಲು ಶ್ರಮಿಸುವಂತೆ ತಿಳಿಸಿದರು.
ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ಮಾತನಾಡಿ, ರಾಜ್ಯದಲ್ಲಿ ಮೈತ್ರಿ ಸರಕಾರ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸ್ಪರ್ಧಿಸಿರುವುದು ಸಂತಸ ತಂದಿದೆ. ಗೌಡರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದರೆ ಇಡೀ ಜಿಲ್ಲೆ ಸಮಗ್ರವಾಗಿ ಅಭಿವೃದ್ಧಿಯಾಗುವುದರ ಜೊತೆಗೆ ಹಲವು ಸಮಸ್ಯೆಗಳು ಬಗೆಹರಿಯಲಿವೆ ಎಂದು ತಿಳಿಸಿದ ಅವರು, ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಗೌಡರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಬೆಕಟ್ಟೆ ಜಯಣ್ಣ, ಕೆಪಿಸಿಸಿ ಸದಸ್ಯ ಕೆ.ಆರ್.ತಾತಯ್ಯ. ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಕೆ.ಸಿ.ಕೃಷ್ಣಮೂರ್ತಿ, ಪಟ್ಟಣ ಪಂಚಾಯತಿ ಸದಸ್ಯ ಸಿ.ಮೋಹನ್, ಕುಮಾರ್, ಶೌಕತ್ಆಲಿ, ರೇಣುಕ ಪ್ರಸಾದ್ ಮುಖಂಡರಾದ ಸಿ.ಆರ್.ಚಿಕ್ಕರಂಗೇಗೌಡ, ಬಿ.ಆರ್.ಭರತ್ಗೌಡ, ಜಿ.ಎಸ್.ಮಂಜುನಾಥ್, ಸಲಿಂಪಾಷಾ, ಹೆಚ್.ಡಿ.ಯಲ್ಲಪ್ಪ, ಮಹಿಳಾ ಘಟಕದ ಭಾಗ್ಯಮ್ಮ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
