ಚಳ್ಳಕೆರೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶದಾದ್ಯಂತ ಜನಸಂಪರ್ಕ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದವತಿಯಿಂದ ಗ್ರಾಮದ ಪ್ರತಿ ಮನೆಗೂ ಹೋಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫ್ಯಾತರಾಜನ್ ತಿಳಿಸಿದ್ದಾರೆ.
ಅವರು, ಸೋಮವಾರ ತಳಕು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮನ್ನೇಕೋಟೆ ಬೋವಿಕಾಲೋನಿಯಲ್ಲಿ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮನೆ ಮನೆಗೂ ತೆರಳಿ ಪಕ್ಷದ ಪರವಾಗಿ ವಿನಂತಿಸಿದರು. ರಾಷ್ಟ್ರದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಚುಕ್ಕಾಣಿಯನ್ನು ಹಿಡಿಯಲಿದೆ ಎಂಬ ಆತ್ಮವಿಶ್ವಾಸವನ್ನು ಅವರು ವ್ಯಕ್ತ ಪಡಿಸಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ, ಜಿಲ್ಲಾ ಪಂಚಾಯಿತಿ ಸದಸ್ಯ ಡಾ.ಬಿ.ಯೋಗೇಶ್ಬಾಬು ಮಾತನಾಡಿ, ಕಾಂಗ್ರೆಸ್ ಪಕ್ಷದ ಜನಸಂಪರ್ಕ ಕಾರ್ಯಕ್ರಮಕ್ಕೆ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಒಲವು ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ಜಿಎಸ್ಟಿ ಕಾರ್ಯಕ್ರಮಗಳು ಜನರಿಗೆ ಬೇಸರತರಿಸಿದ್ದು, ಇದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣವಾಗಲಿದೆ ಎಂದರು.
ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ರೆಡ್ಡಿ ಮಾತನಾಡಿ, ಈ ಕಾರ್ಯಕ್ರಮ ನಿರಂತರವಾಗಿ ನಡೆಯಲಿದ್ದು, ಈಗಾಗಲೇ ತಳಕು ಬ್ಲಾಕ್ ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಜನ ಸಂಪರ್ಕ ಕಾರ್ಯಕ್ರಮ ಉತ್ತಮ ಯಶಸ್ಸುಕಂಡಿದೆ. ಗ್ರಾಮೀಣ ಭಾಗದ ಜನರಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಇರುವ ಗೌರವ ವಿಶ್ವಾಸ ಕಡಿಮೆಯಾಗಿಲ್ಲ. ಜನತೆ ಕಾಂಗ್ರೆಸ್ ಪಕ್ಷದ ಅಧಿಕಾರವನ್ನು ರಾಷ್ಟ್ರದಲ್ಲಿ ಬಯಸುತ್ತಿದ್ದಾರೆಂದರು.
ಜನ ಸಂಪರ್ಕ ಅಭಿಯಾನದಲ್ಲಿ ಮನ್ನೆಕೋಟೆ ರಾಜಣ್ಣ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜಮ್ಮ, ಜಿಲ್ಲಾ ಮುಖಂಡರಾದ ಸಂಪತ್, ಟಿ.ಎಸ್.ಪಾಲಯ್ಯ, ಸೋಮಶೇಖರ್ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








