ಹಾವೇರಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮಾರ್ಪಾಡು, ತಿದ್ದುಪಡಿ ಮಾಡಿಕೊಳ್ಳಲು ವೋಟರ್ ಹೆಲ್ಪ್ಲೈನ್ ಆಪ್ ಬಳಸಿ ಪ್ರತಿ ಮತದಾರನು ಸ್ವಯಂ ಪರಿಶೀಲನೆ ಮಾಡಿಕೊಳ್ಳುವ ಅವಕಾಶವನ್ನು ಭಾರತ ಚುನಾವಣಾ ಆಯೋಗ ಕಲ್ಪಿಸಿದ್ದು, ಈ ಕುರಿತಂತೆ ಕಾಲೇಜುಗಳಲ್ಲಿ ಇವಿಪಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುವಂತೆ ಜಿಲ್ಲೆಯ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರುಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚನೆ ನೀಡಿದರು.
ಹಾವೇರಿ ನಗರದ ಪದವಿ ಪೂರ್ವ ಕಾಲೇಜು ಶಿಕ್ಷಣ ಭವನದಲ್ಲಿ ಗುರುವಾರ ಆಯೋಜಿಸಿದ ವೋಟರ್ ವೇರಿಫಿಕೇಷನ್ ಜಾಗೃತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಕುಟುಂಬ ಹಾಗೂ ಹಳ್ಳಿಗಳಲ್ಲಿ ಈ ಕುರಿತಂತೆ ಜಾಗೃತಿ ಮೂಡಿಸಿ ಪ್ರತಿ ಮತದಾರರ ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳುವುದಲ್ಲದೇ ತಪ್ಪಾಗಿದ್ದರೆ ಪರಿಷ್ಕರಣೆಗೆ ಅವಕಾಶವಿರುವ ಕುರಿಂತೆ ಮನವರಿಕೆ ಮಾಡಿಕೊಟ್ಟು ಲೋಪರಹಿತ ಮತದಾರರ ಪಟ್ಟಿ ಸಿದ್ಧವಾಗಲು ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು.
ಪ್ರತಿ ಶಾಲಾ-ಕಾಲೇಜುಗಳ ಇಐಅ ಕ್ಲಬ್ ಗಳನ್ನು ಸಕ್ರೀಯಗೊಳಿಸಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸವ ಜೊತೆಗೆ ಜಿಲ್ಲೆಯ ಎಲ್ಲಾ ಕಾಲೇಜು, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಬಳಸಿ ಮತದಾರರ ಪಟ್ಟಿಯಲ್ಲಿ ಪರಿಶೀಲನೆ ಮಾಡಿಕೊಳ್ಳಲು ಸೂಕ್ತ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜು ಪ್ರಾಚಾರ್ಯರಿಗೆ ತಿಳಿಸಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪೀರಜಾದೆ, ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲ್ವಾರ, ಜಿ.ಪಂ. ಸಹಾಯಕ ಕಾರ್ಯದರ್ಶಿ ಜಾಫರ್ ಶರೀಫ್ ಸುತಾರ, ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಶಾಖಿರ ಅಹ್ಮದ ಹಾಗೂ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
