ಬೆಂಗಳೂರು
ಹಿಂದೂ ಕುಟುಂಬದಲ್ಲಿ ಸಾವು ಸಂಭವಿದ ನಂತರ ತಿಥಿ ಕಾರ್ಯಗಳು ಸಾಂಪ್ರದಾಯಿಕವಾಗಿ ನಡೆಯುವಾಗ ಮೃತರಿಗೆ ಪ್ರಿಯವಾದ ಆಹಾರಗಳನ್ನು ಅರ್ಪಿಸಲಿದ್ದು ಅದನ್ನು ಕಾಗೆ ತಿನ್ನದಿದ್ದರೆ ಮೃತರ ಕುಟುಂಬಸ್ಥರು ನೊಂದುಕೊಳ್ಳುತ್ತಾರೆ. ಇದನ್ನೇ ಮನಗಂಡ ಉಡುಪಿಯ ನಿವಾಸಿಯೊಬ್ಬರು ಕಾಗೆ ಇಟ್ಟುಕೊಂಡು ವ್ಯವಹಾರ ಆರಂಭಿಸಿ ಅಚ್ಚರಿ ಮೂಡಿಸಿದ್ದಾರೆ..
ಉಡುಪಿ ಜಿಲ್ಲೆಯ ಪ್ರಶಾಂತ್ ಪೂಜಾರಿ ಎಂಬವರು ಈ ಕಾರ್ಯದಲ್ಲಿ ತೊಡಗಿದ್ದು, ಶ್ರಾದ್ಧ, ತಿಥಿ ಕಾರ್ಯಕ್ರಮಗಳಿಗೆ ಕಾಗೆ ಬೇಕಾದರೆ ಬಾಡಿಗೆಗೆ ದೊರೆಯುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಇದು ರಾಷ್ಟ್ರಮಟ್ಟದಲ್ಲಿ ವೈರಲ್ ಆಗುತ್ತಿದ್ದು ಭಿನ್ನ-ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.
ಪ್ರಶಾಂತ್ ಪೂಜಾರಿ ಅವರಿಗೆ ಪ್ರಾಣಿ, ಪಕ್ಷಿಗಳು ಎಂದರೆ ತುಂಬಾ ಇಷ್ಟ. ಒಂದು ದಿನ ಇವರ ಮನೆಯ ಸಮೀಪ ಮೂರು ಕಾಗೆ ಮರಿಗಳು ಅನಾಥವಾಗಿ ಬಿದ್ದಿದ್ದವು. ಇದನ್ನು ಗಮನಿಸಿದ್ದ ಪ್ರಶಾಂತ್, ಅವುಗಳ ಆರೈಕೆ ಮಾಡಲು ಮುಂದಾಗಿದ್ದರು. ಆದರೆ 3ರಲ್ಲಿ 2 ಮರಿಗಳು ಸಾವನ್ನಪ್ಪಿದ್ದು, ಒಂದು ಮಾತ್ರ ಬದುಕುಳಿದಿತ್ತು.
ಶ್ರಾದ್ಧಾ ಕಾರ್ಯಕ್ರಮಗಳಲ್ಲಿ ಕಾಗೆ ಆಹಾರ ತಿನ್ನದೆ ಮೃತರ ಕುಟುಂಬಸ್ಥರು ನೊಂದುಕೊಳ್ಳುತ್ತಿದ್ದರ ಬಗ್ಗೆ ಮಾಹಿತಿ ಲಭಿಸಿತ್ತು. ತಮ್ಮ ಬಳಿ ಕಾಗೆ ಇರುವುzನ್ನೇ ಉಪಾಯ ಮಾಡಿದ್ದ ಪ್ರಶಾಂತ್, ಕಾಗೆ ಸೇವೆ ನೀಡಲು ನಿರ್ಧರಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು
ಅಧಿಕಾರಿಗಳಿಂದ ಕ್ರಮ
ಸಾಮಾಜಿಕ ಜಾಲತಾಣದಲ್ಲಿ ಪ್ರಶಾಂತ್ ಅವರ ಪೋಸ್ಟ್ ವೈರಲ್ ಆಗುತ್ತಿದಂತೆ ಎಚ್ಚೆತ್ತ ಸ್ಥಳೀಯ ಅರಣ್ಯ ಅಧಿಕಾರಿಗಳು ಪ್ರಶಾಂತ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಮನವರಿಕೆ ಮಾಡಿ ಕಾಗೆಯನ್ನು ಮತ್ತೆ ಕಾಡಿಗೆ ಬಿಟ್ಟಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಯುವಕ ಪ್ರಶಾಂತ್, ನನಗೆ ಕಾಗೆಯನ್ನು ಇಟ್ಟುಕೊಂಡು ವ್ಯವಹಾರ ಮಾಡುವ ಯೋಚನೆ ಇರಲಿಲ್ಲ. ತಾನು ಸಾಕಿರುವ ಕಾಗೆಗೆ ರೆಕ್ಕೆ ಸರಿ ಇರಲಿಲ್ಲ. ಆದ್ದರಿಂದ ಅದು ಚೇತರಿಕೆ ಕಂಡ ಮೇಲೂ ಆಹಾರ ನೀಡಿ ಆರೈಕೆ ಮಾಡುತ್ತಿದ್ದೆ. ಈಗ ಕಾಗೆಯನ್ನ ಅರಣ್ಯಕ್ಕೆ ಬಿಟ್ಟಿದ್ದೇವೆ ಎಂದಿದ್ದಾರೆ. ಅಲ್ಲದೆ ಈ ಹಿಂದೆ ಗಾಯಗೊಂಡಿದ್ದ ಉಡವನ್ನು ಕೂಡ ರಕ್ಷಣೆ ಮಾಡಿದ್ದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/07/17-1479377724-cow7-28-15118.gif)