ದಾವಣಗೆರೆ:
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ರದ್ದುಪಡಿಸಲು ಒತ್ತಾಯಿಸಿ ಪ್ರತಿಭಟನೆಗೆ ಅವಕಾಶ ನೀಡುವಂತೆ ಇಲ್ಲಿನ ಆಜಾದ್ ನಗರ ಪೆÇಲೀಸ್ ಠಾಣೆ ಆವರಣದಲ್ಲಿ ಜಮಾಯಿಸಿದ್ದ ವಿವಿಧ ಮುಸ್ಲಿಂ ಸಂಘಟನೆಗಳ ಮುಖಂಡರಿಗೆ ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಬುದ್ಧಿವಾದ ಹೇಳಿದ ಘಟನೆ ಶುಕ್ರವಾರ ನಡೆಯಿತು.
ಇಲ್ಲಿನ ಆಜಾದ್ ನಗರ ಪೆÇಲೀಸ್ ಠಾಣೆ ಆವರಣದಲ್ಲಿ ಜಮಾಯಿಸಿದ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪೌರತ್ವ ತಿದ್ದುಪಡಿ ಕಾಯ್ದೆ ರದ್ದುಪಡಿಸಲು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕೆಂದು ಪಟ್ಟು ಹಿಡಿದರು.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ನಿಷೀಧಾಜ್ಞೆ ಜಾರಿ ಇರುವ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಕ್ಕೆ ಸಾಧ್ಯವಿಲ್ಲ. ನೀವೂ ಸಹ ಯಾರೂ ಪ್ರತಿಭಟನೆ ನಡೆಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಪ್ರತಿಭಟನೆಗೆ ಮುಂದಾಗಬಾರದು ಎಂದು ತಿಳಿ ಹೇಳಿದರು.
ಇದಕ್ಕೂ ಬಗ್ಗದೇ ಸಂಘಟನೆ ಮುಖಂಡರು ಸ್ಪಂದಿಸದೇ ಠಾಣೆ ಆವರಣದಲ್ಲೇ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸ್ ಠಾಣೆಯ ಆವರಣದಲ್ಲಿ ಕೆಲ ಹೊತ್ತು ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾನೂನಿನಲ್ಲಿರುವ ಅಂಶಗಳನ್ನು ಸಂಘಟನೆ ಮುಖಂಡರು, ಕಾರ್ಯಕರ್ತರಿಗೆ ಮನದಟ್ಟು ಮಾಡಿಕೊಡುವ ಮೂಲಕ ಮನವೊಲಿಸಲು ಯಶಸ್ವಿಯಾದರು. ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಮುಖಂಡರುಗಳಾದ ಸೈಯದ್ ಸೈಫುಲ್ಲಾ, ಜೆ.ಅಮಾನುಲ್ಲಾ ಖಾನ್, ಸಾಜೀದ್, ಟಿ.ಅಸ್ಗರ್ ಸೇರಿದಂತೆ ಹಲವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
