ಬೆಂಗಳೂರು
ಕೊರೊನಾ ಸಂದರ್ಭದಲ್ಲಿ ವಿಧಾನಮಂಡಲ ಸಾರ್ವಜನಿಕ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಯು ತನ್ನ ಕರ್ತವ್ಯದಿಂದ ವಿಮುಖವಾಗಲು ಸಾಧ್ಯವಿಲ್ಲ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನ್ನ ಕರ್ತವ್ಯವನ್ನು ನಿರ್ವಹಿಸಬೇಕು. ಸಭೆಗಳನ್ನು ನಡೆಸಬೇಕು, ಅಧಿಕಾರಿಗಳಿಂದ ವಿವರಣೆ ಪಡೆಯಬೇಕು, ತಪ್ಪಿತಸ್ಥರನ್ನು ಗುರುತಿಸಬೇಕು, ತಪ್ಪಿತಸ್ಥರ ಮೇಲೆ ಕ್ರಮಗಳಾಗಬೇಕಾಗಿದೆ. ಆದ್ದರಿಂದ ಇದೇ 28ರಂದು ಸಮಿತಿಯ ಸಭೆ ನಡೆಸಲು ಅವಕಾಶ ನೀಡಬೇಕು ಎಂದು ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಎಚ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅವರಿಗೆ ಪತ್ರ ಬರೆದಿರುವ ಎಚ್.ಕೆ.ಪಾಟೀಲ್, ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್, ಆಘಾತಕಾರಿ ಹಂತ ತಲುಪುತ್ತಿರುವ ಸಂದರ್ಭದಲ್ಲಿ ಕರ್ನಾಟಕದಲ್ಲಿಯೂ ಸಹ ಅತ್ಯಂತ ಗಂಭೀರವಾದ ಪರಿಸ್ಥಿತಿ ಈಗ ನಿರ್ಮಾಣವಾಗಿರುವ ಸನ್ನಿವೇಶದಲ್ಲಿ ಗುರುತರ ಜವಾಬ್ದಾರಿಯನ್ನು ಹೊಂದಿರುವ ಕರ್ನಾಟಕ ವಿಧಾನಮಂಡಲ ಮತ್ತು ವಿಧಾನಮಂಡಲದ ಸಮಿತಿಗಳು ಅತ್ಯಂತ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕಾದ ಅವಶ್ಯಕತೆ ಇದೆ.
ಕೋವಿಡ್-19 ರಿಂದಾಗಿ ಕರ್ನಾಟಕದಲ್ಲಿ ಒಂದು ವಾರ ಮತ್ತೊಂದು ಲಾಕ್ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಮತ್ತು ಬೆಂಗಳೂರಲ್ಲಿ ಹಾಗೂ ಕರ್ನಾಟಕದಲ್ಲಿ ಹೆಚ್ಚು ಹೆಚ್ಚು ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಮಿತಿಗಳ ಸಭೆಗಳನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಯು ಸಹ ತನ್ನ ಸಭೆಗಳನ್ನು ಮುಂದಕ್ಕೆ ಹಾಕಿದೆ. ಜೂನ್-30, 2020 ರಂದು ನಡೆದ ಕೊನೆಯ ಸಭೆಯಲ್ಲಿ ಸಮಿತಿಯ ಸದಸ್ಯರ ಅಭಿಪ್ರಾಯ ಪಡೆದು ಸಮಿತಿಯ ಸಭೆಗಳನ್ನು ಒಂದು ತಿಂಗಳ ಕಾಲ ಮುಂದಕ್ಕೆ ಹಾಕಲು ನಿರ್ಣಯಿಸಲಾಗಿತ್ತು ಎಂದ ಪಾಟೀಲ್ ತಿಳಿಸಿದ್ದಾರೆ.
ಇದಾದ ನಂತರ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಯನ್ನು ಸರ್ಕಾರದ ಎಲ್ಲ ಸಭೆಗಳಂತೆಯೇ ಅಂತರ್ಜಾಲ ತಾಣದ ಮೂಲಕ ಆನ್ಲೈನ್ ಸಭೆ ನಡೆಸಲು ಅವಕಾಶ ಕೋರಿ ಜುಲೈ 1ರಂದು ವಿಧಾನಸಭೆಯ ಕಾರ್ಯದರ್ಶಿಯವರಿಗೆ ಕಡತದ ಮೂಲಕ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಉಪ ಕಾರ್ಯದರ್ಶಿಯವರು ಸಮಿತಿಯ ನಿರ್ದೇಶನದಂತೆ ಸಲ್ಲಿಸಿದ್ದರು. ಈವರೆವಿಗೂ ಆ ಕಡತ ಕುರಿತು ಯಾವುದೇ ನಿರ್ಣಯ ಕೈಗೊಳ್ಳಲಾಗಿಲ್ಲ ಎಂದು ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋವಿಡ್-19 ಕೊರೋನಾ ವೈರಸ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರವು ಎಲ್ಲಾ ರಂಗಗಳಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಭಾವನೆಗಳು ಜನಮಾನಸದಲ್ಲಿ ಗಟ್ಟಿಗೊಳ್ಳುತ್ತಿವೆ. ಕೋವಿಡ್ ಸೋಂಕಿತರಿಗೆ ಮತ್ತು ಶಂಕಿತರಿಗೆ ಗುಣಮಟ್ಟದ ಸೇವೆ ಮತ್ತು ಉತ್ತಮ ಚಿಕಿತ್ಸೆ ಒದಗಿಸುವಲ್ಲಿ ಆಗುತ್ತಿರುವ ದೈನಂದಿನ ವೈಫಲ್ಯಗಳು ರಾಜ್ಯದಲ್ಲಿ ಒಂದು ಕರಾಳ ಅಧ್ಯಾಯವನ್ನು ಆರಂಭಿಸಿವೆ. ಸೋಂಕಿತರಿರಲಿ ಅಥವಾ ಶಂಕಿತರಿರಲಿ ಅವರಿಗೆ ಕನಿಷ್ಠ ಸೌಲಭ್ಯಗಳುಳ್ಳ ಸೇವೆ ದೊರಕುವುದು ಮರೀಚಿಕೆಯಾಗಿ ಮಾನವೀಯ ಅನುಕಂಪದ ಕ್ರಮಗಳು ಇಲ್ಲದಿರುವುದರಿಂದ ಶಂಕಿತರು ಮತ್ತು ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಆಂಬುಲೆನ್ಸ್ಗಳ ಕೊರತೆ ತೀವ್ರಪ್ರಮಾಣದಲ್ಲಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು 2-3 ದಿನಗಳ ವಿಳಂಬವಾಗುತ್ತಿದೆ. ಆಂಬುಲೆನ್ಸ್ ಸಿಗದೇ ಮನೆ ಬಾಗಿಲಲ್ಲಿ ಕೆಲವರು ಮೃತಪಟ್ಟಿದ್ದಾರೆ. ಕೆಲವರಂತೂ ಹಾಸಿಗೆ ಸಿಗದೇ ಆಸ್ಪತ್ರೆಯ ಆವರಣದಲ್ಲಿಯೇ ಮೃತಪಟ್ಟಿದ್ದಾರೆ.
ಉತ್ತಮ ಚಿಕಿತ್ಸೆ, ಆಂಬುಲೆನ್ಸ್ ಸೇವೆ ಮತ್ತು ಗೌರವಯುತ ಅಂತ್ಯಸಂಸ್ಕಾರಗಳು ಅತ್ಯಂತ ಪ್ರಮುಖವಾದ ಅವಶ್ಯಕತೆಗಳು ದಿನನಿತ್ಯವು ಈ ಸೇವೆಗಳನ್ನು ಒದಗಿಸುವಲ್ಲಿ ಆಗುತ್ತಿರುವ ಪ್ರಮಾದ ಮತ್ತು ಹೀನಾಯವಾದ ಪರಿಸ್ಥಿತಿಯ ಬಗ್ಗೆ ತಕ್ಷಣವೇ ಸರಿಪಡಿಸುವ ಅವಶ್ಯಕತೆ ಇದೆ. ಕೊರೋನಾ ಪೀಡಿತರಾಗಿ ಮನೆಯಲ್ಲಿಯೇ ಪ್ರತ್ಯೇಕಿಸಲ್ಪಟ್ಟಿರುವವರಿಗೆ 8-10 ದಿನಗಳು ಕಳೆದರೂ ಹೋಂ ಐಸೊಲೇಷನ್ ಕಿಟ್ ನೀಡಲಾಗಿಲ್ಲ ಎಂಬ ವರದಿಗಳಿವೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಕೊರೋನಾ ನಿರ್ವಹಣೆಯಲ್ಲಿ ಪ್ರತಿಯೊಂದು ಪರಿಕರದ ಖರೀದಿಯಲ್ಲಿ ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದು, ಸರ್ಕಾರ ಖರೀದಿಸಿರುವ ಉಪಕರಣಗಳು, ಪರಿಕರಗಳು, ಚಿಕಿತ್ಸಾ ಸಾಮಗ್ರಿಗಳು ಕಳಪೆಮಟ್ಟದ್ದವೆಂದು ದೂರುಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿರುವುದರಿಂದ ಕೋವಿಡ್ ನಿರ್ವಹಣೆಯಲ್ಲಿ ಭ್ರಷ್ಟಾಚಾರದ ಸಂದೇಹಗಳು ಬಲವಾಗುತ್ತಿವೆ. ಇಂಥ ಸಂದರ್ಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಯು ತನ್ನ ಕರ್ತವ್ಯದಿಂದ ವಿಮುಖವಾಗಲು ಸಾಧ್ಯವಿಲ್ಲ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನ್ನ ಕರ್ತವ್ಯವನ್ನು ನಿರ್ವಹಿಸಬೇಕು. ಸಭೆಗಳನ್ನು ನಡೆಸಬೇಕು, ಅಧಿಕಾರಿಗಳಿಂದ ವಿವರಣೆ ಪಡೆಯಬೇಕು, ತಪ್ಪಿತಸ್ಥರನ್ನು ಗುರುತಿಸಬೇಕು, ತಪ್ಪಿತಸ್ಥರ ಮೇಲೆ ಕ್ರಮಗಳಾಗಬೇಕು.
ಕರ್ನಾಟಕ ಸರ್ಕಾರದ ಇ-ಆಡಳಿತ ವ್ಯವಸ್ಥೆಯಲ್ಲಿ ವಿದ್ಯುನ್ಮಾನಚಾಲಿತ ವ್ಯವಸ್ಥೆ ಹೊಂದಿರುವ ವಾಹನದ ಮೂಲಕ ತಪಾಸಣೆ ಕೈಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತಂದು ದಶಕ ಕಳೆದಿದೆ. ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇಂಥ ವಿಶಿಷ್ಟ ಸಂಕಷ್ಟದ ಸನ್ನಿವೇಶದಲ್ಲಿ ಈ ಸೌಲಭ್ಯವನ್ನು ಉಪಯೋಗಿಸಿಕೊಂಡು ತನ್ನ ಕರ್ತವ್ಯ ನಿರ್ವಹಣೆಗೆ ಯಾವುದೇ ಅಡ್ಡಿ ಇಲ್ಲದಂತೆ ಕಾರ್ಯನಿರ್ವಹಿಸಬೇಕು ಎಂದು ಪಾಟೀಲ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








