ಗುಬ್ಬಿ
ಆಧುನಿಕತೆ ಬೆಳೆದಂತೆ ಮರೆಯಾಗುತ್ತಿರುವ ಧಾರ್ಮಿಕ ಮೌಲ್ಯಗಳನ್ನು ಪ್ರತಿಯೊಬ್ಬರೂ ಸಾಮಾಜಿಕ ಬದುಕಿನಲ್ಲಿ ಅಳವಡಿಸಿಕೊಂಡಾಗ ಸುಸಂಸ್ಕತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ನಿಟ್ಟೂರು ಹೋಬಳಿ ಪುರ ಗ್ರಾಮದ ಕೆರೆ ಹೇಮಾವತಿ ನೀರಿನಿಂದ ಭರ್ತಿಯಾಗಿದ್ದು ಕೆರೆಗೆ ಬಾಗಿನ ಅರ್ಪಿಸಿದ ನಂತರ ಗ್ರಾಮದ ಶ್ರೀವೀರಭದ್ರಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯವನ್ನು ವೀಕ್ಷಿಸಿದ ನಂತರ ನಡೆದ ಸಮಾರಂಭದಲ್ಲಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಇಂದಿಗೂ ದೇವರು ಮತ್ತು ದೇವಾಲಯಗಳು ಅಭಿವೃದ್ಧಿ ಹೊಂದುತ್ತಿದ್ದು ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದರು.
ಗ್ರಾಮೀಣ ಜನರ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ವಿವಿಧ ಯೋಜನೆಗಳಡಿ ಗ್ರಾಮಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಗ್ರಾಮೀಣ ಭಾಗದಲ್ಲಿ ಸಣ್ಣ ಕೈಗಾರಿಕೆಗಳನ್ನು ಪ್ರಾರಂಭಿಸಿದರೆ ಇಲಾಖೆಯಿಂದ ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ತಿಳಿಸಿದರು.
ಗ್ರಾಮೀಣ ಭಾಗದ ರೈತರು ಕೆರೆಗಳಿಗೆ ಹೇಮಾವತಿ ನೀರು ಬರುತ್ತದೆಯೊ ಇಲ್ಲವೋ ಎಂಬ ಆತಂಕ ಪಡಬೇಕಾಗಿಲ್ಲ. ಹಂತ ಹಂತವಾಗಿ ಎಲ್ಲಾ ಕೆರೆಗಳಿಗೂ ಹೇಮಾವತಿ ನೀರನ್ನು ಹರಿಸಲಾಗುವುದೆಂದು ತಿಳಿಸಿದ ಅವರು, ಈಗಾಗಲೆ ತಾಲ್ಲೂಕಿನ ಹಲವು ಕೆರೆಗಳು ಭರ್ತಿಯಾಗಿವೆ. ಉಳಿದ ಎಲ್ಲಾ ಕೆರೆಗಳಿಗೂ ಹೇಮಾವತಿ ನೀರನ್ನು ಹರಿಸಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀವೀರಭದ್ರಸ್ವಾಮಿ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
