ದಾವಣಗೆರೆ:
ಇತ್ತೀಚೆಗೆ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕರ ಮಧ್ಯೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಗೃಹ ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿದ್ದರೂ ಸುಳ್ಳು ಮಾಹಿತಿ ನೀಡಿದ ಎಂ.ಬಿ.ಪಾಟೀಲ್ ಅವರ ಸಚಿವ ಸ್ಥಾನ ಹಾಗೂ ಶಾಸಕತ್ವವನ್ನು ಅನರ್ಹಗೊಳಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಹರೀಶ್ ಹಳ್ಳಿ ಆಗ್ರಹಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಈಗಟನ್ ರೆಸಾರ್ಟ್ನಲ್ಲಿ ಕಂಪ್ಲಿ ಶಾಸಕ ಗಣೇಶ್ರವರು ಶಾಸಕ ಆನಂದ್ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರೂ, ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಹಲ್ಲೆ ನಡೆಸಿರುವ ಶಾಸಕನನ್ನು ಬಂಧಿಸಲು ಪೊಲೀಸರಿಗೆ ನಿರ್ದೇಶನ ನೀಡುವುದನ್ನು ಬಿಟ್ಟು, ಏನೂ ಅರಿಯದವರಂತೆ ಆನಂದಸಿಂಗ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ.
ಆನಂದಸಿಂಗ್ ಅವರನ್ನು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಸೇರಿಸಿದ್ದೇವೆ ಎಂಬುದಾಗಿ ಮಾಧ್ಯಮಗಳಿಗೆ ಸುಳ್ಳು ಮಾಹಿತಿ ನೀಡುವ ಮೂಲಕ ಸಾಕ್ಷಾಧಾರ ಕಾಯ್ದೆಯನ್ನು ಸಂಪೂರ್ಣ ಉಲ್ಲಂಘಿಸಿದ್ದಾರೆ. ಅಲ್ಲದೆ, ಸಾಕ್ಷಾಧಾರಗಳನ್ನು ನಾಶ ಪಡಿಸುವ ಮೂಲಕ ಆರೋಪಿತ ಶಾಸಕ ಗಣೇಶ್ ತಪ್ಪಿಸಿಕೊಳ್ಳಲು ನೆರವು ನೀಡಿದ್ದಾರೆ. ಆದ್ದರಿಂದ ಎಂ.ಬಿ.ಪಾಟೀಲ್ ಅವರ ಶಾಸಕತ್ವವನ್ನು ಅನರ್ಹಗೊಳಿಸಬೇಕೆಂದು ಒತ್ತಾಯಿಸಿದರು.
ಈಗಾಗಲೇ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಭಾರತೀಯ ಜನಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಎಂ.ಬಿ.ಪಾಟೀಲ್ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಕೋರಿ, ರಾಷ್ಟ್ರಪತಿಗಳಿಗೆ ಹಾಗೂ ದೇಶದ ಅಟಾರ್ನಿ ಜನರೆಲ್ ಅವರಿಗೆ ದೂರು ನೀಡಲಾಗಿದ್ದು, ದೂರು ತಲುಪಿರುವ ಬಗ್ಗೆ ರಾಷ್ಟ್ರಪತಿಗಳ ಕಚೇರಿಯಿಂದ ಮಿಂಚಂಚೆಯಲ್ಲಿ ಸಂದೇಶ ಸಹ ಬಂದಿದೆ. ಈ ದೂರಿನ ಹಿನ್ನೆಲೆಯಲ್ಲಿ ಏನೂ ಕ್ರಮ ಕೈಗೊಳ್ಳಲಿದ್ದಾರೋ ಎಂಬುದನ್ನು ನೋಡಿಕೊಂಡು, ನಂತರ ಎಂ.ಬಿ.ಪಾಟೀಲ್ ವಿರುದ್ಧ ನ್ಯಾಯಾಂಗ ಹೋರಾಟವು ನಡೆಸಲಾಗುವುದು ಎಂದು ಎಚ್ಚರಿಸಿದರು.
ಶಾಸಕರ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿರುವುದನ್ನು ಸಚಿವ ಎಂ.ಬಿ.ಪಾಟೀಲ್ ಬಹಿರಂಗವಾಗಿ ಒಪ್ಪಿಕೊಂಡು, ಸಾರ್ವಜನಿಕವಾಗಿ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ಮಲ್ಲಿಕಾರ್ಜುನ ಇಂಗಳೇಶ್ವರ, ಎಸ್.ಆರ್.ಚಿಕ್ಕನಗೌಡ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
