ಚಳ್ಳಕೆರೆ
ಕಳೆದ ಹಲವಾರು ವರ್ಷಗಳ ಮಳೆ ವೈಪಲ್ಯದಿಂದ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವದ ಜೊತೆಗೆ ಬಡ ಜನರಿಗೆ ಜೀವನ ನಿರ್ವಹಿಸಲು ಕೂಲಿ ಸಹ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಉದ್ಯೋಗ ಖಾತರಿ ಯೋಜನೆ ಜಾರಿ ಹಾಗೂ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡುವುದಾಗಿ ಘಟಪರ್ತಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಟಿ.ಓಬಣ್ಣ ತಿಳಿಸಿದ್ಧಾರೆ.
ತಾಲ್ಲೂಕಿನ ತಳಕು ಹೋಬಳಿಯ ಘಟಪರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಚುನಾವಣಾಧಿಕಾರಿಯಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ಎಲ್.ಈಶ್ವರಪ್ರಸಾದ್ ಕಾರ್ಯನಿರ್ವಹಿಸಿದ್ದು, ಅಧ್ಯಕ್ಷಸ್ಥಾನಕ್ಕೆ ಟಿ.ಓಬಣ್ಣ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪತ್ರಿಕೆಯೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಟಿ.ಓಬಣ್ಣ, ಘಟಪರ್ತಿ ಗ್ರಾಮವೂ ಸೇರಿದಂತೆ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ಕುಡಿಯುವ ನೀರು ಪೂರೈಕೆಗೆ ಮನವಿ ಮಾಡಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು. ಸಾರ್ವಜನಿಕ ಸಮಸ್ಯೆಗಳನ್ನು ನಿವಾರಿಸಲು ಎಲ್ಲಾ ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಉಪಾಧ್ಯಕ್ಷೆ ವನಜಾಕ್ಷಿ, ಸದಸ್ಯರಾದ ವೀರಭದ್ರಪ್ಪ, ಮಹಾಂತೇಶ್, ಮಾಜಿ ಅಧ್ಯಕ್ಷೆ ರಾಜಮ್ಮ, ಏಕಾಂತಮ್ಮ, ಕಮಲಮ್ಮ, ವರಲಕ್ಷ್ಮೀ, ಮಂಜಮ್ಮ, ಕಿರಿಟಪ್ಪ, ರಂಗಸ್ವಾಮಿ, ಬಿಬಿಜಾನ್, ತಿಪ್ಪೆಶ್, ಮಂಜುನಾಥ್ ರೆಡ್ಡಿ, ಚನ್ನಗಾನಹಳ್ಳಿ ಮಲ್ಲೇಶ್, ನಾಗೇಂದ್ರ, ಲಾಲು ಸಿಂಗ್, ನರೇಗಾ ಸಹಾಯಕ ಪರ್ವತಯ್ಯ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/7CLK3P.gif)