ಹಾವೇರಿ

ಜಿಲ್ಲೆಯಾದ್ಯಂತ ಯುವ ಹಾಗೂ ಭಾವಿ ಮತದಾರರ ನೋಂದಣಿಗಾಗಿ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜನವರಿ 6, 7 ಹಾಗೂ 8 ರಂದು ಜಿಲ್ಲೆಯಾದ್ಯಂತ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವ ಮತದಾರರ ನೋಂದಣಿಗೆ ಎಲ್ಲ ಅಧಿಕಾರಿಗಳು ಆದ್ಯತೆ ಮೇಲೆ ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಮಿಂಚಿನ ನೋಂದಣಿ ಕುರಿತಂತೆ ಗುರುವಾರ ತಾಲೂಕಾ ತಹಶೀಲ್ದಾರ, ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು ಮಿಂಚಿನ ನೋಂದಣಿಯ ದಿನ ಎಲ್ಲ ಬಿ.ಎಲ್.ಓ.ಗಳು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಉಪಸ್ಥಿತರಿದ್ದು ಮತದಾರರ ನೋಂದಣಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದ್ದಾರೆ.
ಮತದಾರರ ನೋಂದಣಿಗೆ 18 ವರ್ಷ ಪೂರ್ಣಗೊಂಡಿರಬೇಕು, 18 ರಿಂದ 20 ವರ್ಷ ವಯೋಮಾನದ ಮತದಾರರಾಗಿ ನೋಂದಾಯಿಸಿಕೊಳ್ಳದವರನ್ನು ಮತದಾರರಾಗಿ ಸೇರ್ಪಡೆಗೊಳಿಸುವ ಕಾರ್ಯವನ್ನು ಕೈಗೊಳ್ಳಬೇಕು. ಈ ಕುರಿತಂತೆ ತಾಲೂಕಾ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮತದಾರರ ಜಾಗೃತಿ ಕಾರ್ಯಕ್ರಮದ ಮೂಲಕ ಮಿಂಚಿನ ಮತದಾರರ ನೋಂದಣಿ ಕುರಿತಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು, ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಕಾಲೇಜುಗಳಿಗೆ ಭೇಟಿ ನೀಡಿ ಯುವ ಮತದಾರರ ನೋಂದಣಿ ಮಾಡಿಕೊಳ್ಳಬೇಕು. ಈ ಕುರಿತಂತೆ ಜಾಗೃತಿ ಮೂಡಿಸಬೇಕು. ಪ್ರತಿ ಕಾಲೇಜುಗಳಿಗೆ ಓರ್ವ ಅಧಿಕಾರಿಗಳನ್ನು ನಿಯೋಜಿಸಬೇಕು. ಜಿಲ್ಲಾ ಮಟ್ಟದ ಅದಿಕಾರಿಗಳು, ತಹಶೀಲ್ದಾರ, ಉಪ ವಿಭಾಗಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾ ಹಣಾಧಿಕಾರಿಗಳು ಕಾಲೇಜುಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇ ಶಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರತಿ ಕಾಲೇಜಿನ ಪ್ರಾಚಾರ್ಯರಿಗೆ ಕನಿಷ್ಠ ನೋಂದಣಿ ಕುರಿತಂತೆ ಗುರಿ ನಿಗದಿಪಡಿಸಿ ಅರ್ಹ ಯುವ ಮತದಾರರನ್ನು ನೋಂದಣಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಮತದಾರರ ಮಿಂಚಿನ ನೋಂದಣಿ ಕುರಿತಂತೆ ಎಲ್ಲ ಬ್ಲಾಕ್ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು ಹಾಗೂ ಮೇಲುಸ್ತುವಾರಿ ಅಧಿಕಾರಿಗಳ ಸಭೆ ಕರೆದು ಮಾಹಿತಿ ನೀಡಬೇಕು ಎಂದು ಸೂಚಿಸಿದರು.ಮತದಾರರ ಮಿಂಚಿನ ನೋಂದಣಿ ಆರಂಭವಾಗುವ ಜನವರಿ 6 ರಂದು ಪ್ರಭಾತಪೇರಿಗಳನ್ನು ಆಯೋಜಿಸಬೇಕು. ಮತದಾರರ ನೋಂದಣಿ ಕುರಿತಂತೆ ಜಾಗೃತಿ ಮೂಡಿಸಬೇಕು. ಎಲ್ಲ ಕಾಲೇಜುಗಳಿಗೆ, ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ನೋಂದಣಿಗೆ ಸ್ಪೂರ್ತಿ ತುಂಬಬೇಕು. ನೋಂದಣಿಗೆ ನಮೂನೆ 6ನ್ನು ವಿತರಿಸಿ ನೋಂದಣಿಗೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಯುವ ಮತದಾರರ ನೋಂದಣಿ ಪ್ರಮಾಣದಲ್ಲಿ ನಿರೀಕ್ಷಿತ ಗುರಿಗಿಂತ ಕಡಿಮೆ ಪ್ರಮಾಣದಲ್ಲಿ ನೋಂದಣಿಯಾಗಿರು ವುದರಿಂದ ಹೆಚ್ಚಿನ ಆದ್ಯತೆ ನೀಡಿ ಎಲ್ಲ ತಹಶೀಲ್ದಾರಗಳು, ಸಂಬಂಧಿಸಿದ ಅಧಿಕಾರಿಗಳು ಮಿಂಚಿನ ನೋಂದಣಿ ಅವಕಾಶ ಬಳಸಿಕೊಂಡು ಮತದಾರರ ಪಟ್ಟಿಯಿಂದ ಹೊರಗುಳಿದ ಹಾಗೂ 18 ವರ್ಷ ತುಂಬಿದ ಎಲ್ಲರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಸವಣೂರ ಉಪಭಾಗಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ, ಸರ್ಕಾರಿ ಇಂಜನೀಯರಿಂಗ್ ಕಾಲೇಜ್ ಪ್ರಾಚಾರ್ಯ ಪ್ರಕಾಶ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಜಾಫರ ಸುತಾರ್, ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪೀರಜಾದೆ, ಜಿಲ್ಲೆಯ ಎಲ್ಲ ತಹಶೀಲ್ದಾರಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
