ಚಳ್ಳಕೆರೆ
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ವಾಲ್ಮೀಕಿ ಸಮುದಾಯದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಮಹರ್ಷಿ ಶ್ರೀವಾಲ್ಮೀಕಿಯವರ ಜಯಂತಿ ಕಾರ್ಯಕ್ರಮವನ್ನು ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಅ.13ರ ಭಾನುವಾರ ಬೆಳಗ್ಗೆ 10.30ಕ್ಕೆ ಆಚರಿಸಲಾಗುವುದು ಎಂದು ಉತ್ಸವ ಸಮಿತಿ ಅಧ್ಯಕ್ಷರೂ, ತಹಶೀಲ್ದಾರ್ ಆದ ಎಂ.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ರಾಜನಹಳ್ಳಿ ವಾಲ್ಮೀಕಿ ಮಹಾಸಂಸ್ಥಾನದ ಶ್ರೀಪ್ರಸನ್ನಾನಂದಪುರಿ ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಸಮಾರಂಭವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜೆ.ಎಂ.ವಿಶಾಲಾಕ್ಷಿ, ತಾಲ್ಲೂಕು ಪಂಚಾಯಿತಿ ಅದ್ಯಕ್ಷೆ ವಿಜಯಲಕ್ಷ್ಮಿ, ಸಂಸದ ಎ.ನಾರಾಯಣಸ್ವಾಮಿ, ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ವಾಲ್ಮೀಕಿಯವರ ಬಗ್ಗೆ ಚಿತ್ರದುರ್ಗದ ಬೋರಪ್ಪ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಿ.ಓಬಣ್ಣ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ತಾಲ್ಲೂಕು ನಾಯಕ ಸಂಘದ ಅದ್ಯಕ್ಷ ಎಚ್.ಎಂ.ಮಲ್ಲಪ್ಪನಾಯಕ, ವಾಲ್ಮೀಕಿ ಕಲ್ಯಾಣ ಮಂಟಪ ಟ್ರಸ್ಟ್ ಅಧ್ಯಕ್ಷ ಬಂಗ್ಯಪ್ಪ ಮಾಸ್ಟರ್, ಸಮುದಾಯದ ವಿವಿಧ ಕ್ಷೇತ್ರಗಳ ಮುಖಂಡರು ಸಭೆಯಲ್ಲಿ ಭಾಗವಹಿಸುವರು. ಶ್ರೀವಾಲ್ಮೀಕಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ 10.30ಕ್ಕೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಚಾಲನೆ ನೀಡುವರು ಎಂದು ಅವರು ತಿಳಿಸಿದ್ಧಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ