ದಾವಣಗೆರೆ :
ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದಲ್ಲಿ ಬಾಕಿ ಇರುವ 1.75 ಕೋಟಿ ಅನುದಾನವನ್ನು ಅಪೂರ್ಣವಾಗಿರುವ ಕಟ್ಟಡಗಳ ಪೂರ್ಣಗೊಳಿಸಲು ಬಳಸಿಕೊಳ್ಳಿ ಸಂಸದ ಜಿ.ಎಂ ಸಿದ್ದೇಶ್ವರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾವಣಗೆರೆಗೆ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ 25 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 23.25 ಕೋಟಿ ರೂ. ಕಟ್ಟಡಗಳ ಕಾಮಗಾರಿಗೆ ಬಳಸಲಾಗಿದೆ. ಈಗ ಉಳಿದಿರುವ ಹಣವನ್ನು ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾಮಗಾರಿಗಳಿಗೆ ಮತ್ತು ಬಾಕಿ ಅನುದಾನ ಬಿಡುಗಡೆಗೆ ಬಳಸಿಕೊಂಡು ಪ್ರಗತಿ ಸಾಧಿಸಬೇಕೆಂದು ಸೂಚನೆ ನೀಡಿದರು.
ದಾವಣಗೆರೆ ಸೇರಿದಂತೆ 04 ತಾಲ್ಲೂಕುಗಳಲ್ಲಿ 16ನೇ ಲೋಕಸಭಾ ಅವಧಿಯ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ತಾಲ್ಲೂಕು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮತ್ತು ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಫೋಟೊಗಳನ್ನು ವೀಕ್ಷಿಸಿ, ಕಟ್ಟಡ ಕಾಮಗಾರಿಗಳ ಬಗ್ಗೆ ಮಾಹಿತಿ ಪರಿಶೀಲನೆ ನಡೆಸಿ, ಅಪೂರ್ಣಗೊಂಡಿರುವ ಕಾಮಗಾರಿಗಳನ್ನು 2020ರ ಫೆಬ್ರವರಿಯಲ್ಲಿ ಮುಕ್ತಾಯಗೊಳಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಪೂರ್ಣಗೊಂಡಿರುವ ಕಟ್ಟಡ ಕಾಮಗಾರಿಗಳ ದಾಖಲಾತಿಗಳನ್ನು ಜಿಲ್ಲಾಡಳಿತ ಕಚೇರಿಗೆ ಸಲ್ಲಿಸಿ, ಬಾಕಿ ಅನುದಾನವನ್ನು ಪಡೆದುಕೊಳ್ಳುವಂತೆ ಸೂಚಿಸಿದರು. ಹಾಗೂ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಇನ್ನು ಮೂರು ತಿಂಗಳಲ್ಲಿ ಮುಗಿಸಬೇಕು ಮತ್ತು ಪ್ಲಾಸ್ಟರಿಂಗ್ ಹಂತದ ಕಾಮಗಾರಿಗಳನ್ನು ಒಂದು ವಾರದೊಳಗೆ ಮುಗಿಸಿ ಫೋಟೊ ಸಮೇತ ತಮಗೆ ತಲುಪಿಸಬೇಕು ಎಂದರು.ಸಭೆಯಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ.ಜಿ, ಉಪ ವಿಭಾಗಧಿಕಾರಿ ಮಮತಾ ಹೊಸಗೌಡರ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
