ತುಮಕೂರು
ನಗರ ವೃತ್ತ ನಿರೀಕ್ಷಕರು ಹಾಗೂ ಸಂಚಾರಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಸೆ. 25 ರಂದು ಸೂಕ್ತ ದಾಖಲಾತಿಗಳಿಲ್ಲದೆ ತುಮಕೂರು ನಗರದಲ್ಲಿ ಸಂಚರಿಸುತ್ತಿದ್ದ 80 ಕ್ಕೂ ಹೆಚ್ಚು ಆಟೋ ರಿಕ್ಷಾಗಳನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ.
ಸೆ. 26 ರಂದು ರಸ್ತೆ ನಿಯಮಗಳನ್ನು ಉಲ್ಲಂಘಿಸಿ ಬಸ್ ನಿಲ್ದಾಣಗಳ ಬಳಿ (ಬಸ್ ಬೇ) ಬಸ್ಗಳನ್ನು ನಿಲ್ಲಿಸದೇ ರಸ್ತೆಯ ಮಧ್ಯಭಾಗದಲ್ಲಿ ಬಸ್ಗಳನ್ನು ನಿಲ್ಲಿಸಿಕೊಂಡು ಸಂಚಾರ ವ್ಯವಸ್ಥೆಗೆ ತೊಂದರೆಯುಂಟು ಮಾಡಿ ಕಾನೂನು ಉಲ್ಲಂಘನೆ ಮಾಡಿದ 03 ಕೆ.ಎಸ್.ಆರ್.ಟಿ.ಸಿ ಬಸ್ಗಳು ಹಾಗೂ 01 ಖಾಸಗಿ ಬಸ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಜರುಗಿಸಲಾಗಿದೆ.
ತುಮಕೂರು ನಗರದಲ್ಲಿ ಅಪ್ರಾಪ್ತರು / ಪಡ್ಡೆ ಹುಡುಗರು ದ್ವಿಚಕ್ರ ವಾಹನ ಚಾಲನೆ ಮಾಡುವ ಬಗ್ಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೂರು ಜನರು ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದುದರ ಬಗ್ಗೆ ಶಾಲಾ-ಕಾಲೇಜುಗಳ ಮುಖ್ಯಸ್ಥರುಗಳಿಗೆ ಪತ್ರ ವ್ಯವಹಾರ ಮಾಡಿ ವಿದ್ಯಾರ್ಥಿಗಳಿಗೆ ಸೂಚನೆಗಳನ್ನೂ ಸಹ ನೀಡಲಾಗಿರುತ್ತದೆ. ಆದರೂ ಸಹ ಶಾಲಾ ಕಾಲೇಜುಗಳ ಮುಖ್ಯಸ್ಥರುಗಳು ಈ ಬಗ್ಗೆ ಗಮನ ಹರಿಸಿರುವುದಿಲ್ಲ. ಆದ್ದರಿಂದ ಸೆ. 27 ರಂದು ತುಮಕೂರು ನಗರದಲ್ಲಿ ಅಪ್ರಾಪ್ತರು/ ಪಡ್ಡೆ ಹುಡುಗರು ದ್ವಿಚಕ್ರ ವಾಹನ ಚಾಲನೆ ಮಾಡುವುದನ್ನು ಪತ್ತೆ ಮಾಡಿ 28 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿರುತ್ತದೆ.
ಆದ್ದರಿಂದ ಇನ್ನು ಮುಂದೆ ಪೋಷಕರು ವಾಹನ ಚಾಲನಾ ಪರವಾನಗಿ ಇಲ್ಲದೆ ಇರುವ ಅಪ್ರಾಪ್ತ ಕಾಲೇಜು ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡಲು ನೀಡ ಬಾರದಾಗಿ ತಿಳಿವಳಿಕೆ ನೀಡಿ ಮರುಕಳಿಸಿದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದೆಂದು ತಿಳಿಸಲಾಗಿದೆ. ಸಂಚಾರಿ ನಿಯಮಗಳನ್ನು ಪಾಲಿಸುವ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ಯಾವಾಗಲೂ ಪೊಲೀಸ್ ಇಲಾಖೆ ಬೆನ್ನೆಲುಬಾಗಿರುತ್ತದೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
