ಉಚಿತ ಪುಸ್ತಕ ಹಾಗೂ ಬ್ಯಾಗ್‍ಗಳ ವಿತರಣಾ ಕಾರ್ಯಕ್ರಮ

ಹೊನ್ನಾಳಿ:

        ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ದೇಶದ ಸತ್ಪ್ರಜೆಗಳಾಗಬೇಕು. ರಾಷ್ಟ್ರನಾಯಕರ ಗುಣಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಬಾಳಬೇಕು ಎಂದು ಸಂಸದ ಜಿ.ಎಂ. ಸಿದ್ಧೇಶ್ವರ್ ಹೇಳಿದರು.

        ಇಲ್ಲಿನ ಟಿ.ಬಿ. ವೃತ್ತದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಶ್ರೀ ಜಿ. ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಷನ್ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಉಚಿತ ಪುಸ್ತಕ ಹಾಗೂ ಬ್ಯಾಗ್‍ಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

       ಇಂದಿನ ವಿದ್ಯಾರ್ಥಿಗಳೇ ನಮ್ಮ ದೇಶದ ಮುಂದಿನ ಜವಾಬ್ದಾರಿಯುತ ಪ್ರಜೆಗಳು. ಹಾಗಾಗಿ, ಯಾರೂ ಸಮಯವನ್ನು ವ್ಯರ್ಥ ಮಾಡದೇ, ಉತ್ತಮವಾಗಿ ಅಧ್ಯಯನ ಮಾಡುವ ಮೂಲಕ ದೇಶ ನಿರ್ಮಾಣದ ಕಾರ್ಯದಲ್ಲಿ ತಮ್ಮ ಪಾಲಿನ ಕರ್ತವ್ಯವನ್ನು ಮಾಡಬೇಕು ಎಂದು ತಿಳಿಸಿದರು.

        ನಮ್ಮ ದೇಶದ ನಾಯಕರಾದ ಡಾ.ಎಸ್. ರಾಧಾಕೃಷ್ಣನ್, ಲಾಲ್ ಬಹದ್ದೂರ್ ಶಾಸ್ತ್ರೀ, ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತಿತರರು ಅತ್ಯಂತ ಬಡತನದಲ್ಲಿ ಹುಟ್ಟಿ, ಉನ್ನತ ವಿದ್ಯಾಭ್ಯಾಸ ಮಾಡಿ, ಬದುಕಿನಲ್ಲಿ ಸಂಕಷ್ಟಗಳನ್ನು ಎದುರಿಸಿ ಮಾದರಿ ಜೀವನ ನಡೆಸಿ ನಮಗೆ ಮಾದರಿಯಾಗಿದ್ದಾರೆ. ಅವರ ಜೀವನ ನಮಗೆ ದಾರಿದೀಪವಾಗಬೇಕು. ಅವರಂತೆ ನೀವೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ನಾಡು ಹೆಮ್ಮೆಪಡುವ ನಾಗರೀಕರಾಗಬೇಕು ಎಂದು ವಿವರಿಸಿದರು.

         ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ತಮ್ಮ ವಿಶಿಷ್ಟ ವ್ಯಕ್ತಿತ್ವದಿಂದ ಇದೇ ನಾಯಕರ ಸಾಲಿನಲ್ಲಿ ನಿಲ್ಲುತ್ತಾರೆ. ಬಡತನದ ಕುಟುಂಬದಲ್ಲಿ ಹುಟ್ಟಿ ತಂದೆ-ತಾಯಿಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಇಂದು ಜಗ ಮೆಚ್ಚುವ ವ್ಯಕ್ತಿಯಾಗಿದ್ದಾರೆ. ದಿನದ 24 ಗಂಟೆಗಳ ಪೈಕಿ 18 ಗಂಟೆಗಳ ಕಾಲ ದೇಶಕ್ಕಾಗಿ ಕೆಲಸ ಮಾಡುವ ವ್ಯಕ್ತಿಯಾಗಿದ್ದಾರೆ. ಕಳೆದ 4 ವರ್ಷಗಳ ಅವಧಿಯಲ್ಲಿ ಒಂದು ದಿನ ಕೂಡ ರಜೆ ಪಡೆಯದೇ ಕೆಲಸ ನಿರ್ವಹಿಸಿದ್ದಾರೆ. ಇಡೀ ವಿಶ್ವವೇ ನಮ್ಮ ಭಾರತ ದೇಶವನ್ನು ಬೆರಗುಗಣ್ಣುಗಳಿಂದ ನೋಡುವ ಮಟ್ಟಕ್ಕೆ ದೇಶವನ್ನು ಅಭಿವೃದ್ಧಿಪಡಿಸಿದ್ದಾರೆ. ಅಂಥ ವ್ಯಕ್ತಿ ಮತ್ತೊಂದು ಅವಧಿಗೆ ನಮ್ಮ ದೇಶದ ಪ್ರಧಾನಮಂತ್ರಿಯಾದರೆ ನಮ್ಮ ದೇಶ ಮತ್ತಷ್ಟು ಅಭಿವೃದ್ಧಿ ಸಾಧಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ತಿಳಿಸಿದರು.

       ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೀಳರಿಮೆ ಬೆಳೆಸಿಕೊಳ್ಳಬಾರದು. ಉತ್ತಮವಾಗಿ ಅಧ್ಯಯನ ಮಾಡಿ ಶೈಕ್ಷಣಿಕ ಪ್ರಗತಿ ಸಾಧಿಸುವ ಮೂಲಕ ತಾವು ಯಾವುದೇ ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೂ ಕಡಿಮೆ ಇಲ್ಲ ಎಂಬುದನ್ನು ನಿರೂಪಿಸಬೇಕು. ನಾವು ಗಳಿಸುವ ಹಣಕ್ಕಿಂತ ವಿದ್ಯೆ ಮಿಗಿಲಾದುದು. ಸಹೋದರರು ಆಸ್ತಿಯಲ್ಲಿ ಪಾಲು ಬೇಡಿದಂತೆ ವಿದ್ಯೆಯಲ್ಲಿ ಪಾಲು ಬೇಡಲಾರರು. ಆದ್ದರಿಂದ, ಎಲ್ಲರೂ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.

       ಶಾಸಕ ಎಂ.ಪಿ. ರೇಣುಕಾಚಾರ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮೆಲ್ಲರಿಗೂ ಹಿರಿಯರಾದ ಮಾಜಿ ಸಂಸದ ದಿ.ಜಿ. ಮಲ್ಲಿಕಾರ್ಜುನಪ್ಪ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಾಕಷ್ಟು ಒಳಿತನ್ನು ಮಾಡಿದ್ದರು. ಅವರ ಹಾದಿಯಲ್ಲೇ ಮುನ್ನಡೆದಿರುವ ಸಂಸದ ಜಿ.ಎಂ. ಸಿದ್ಧೇಶ್ವರ್ ಜನಪರ ಕೆಲಸಗಳನ್ನು ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರು ಮತ್ತೊಮ್ಮೆ ದಾವಣಗೆರೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಬೇಕು ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಇಂದಿನ ಅಗತ್ಯವಾಗಿದೆ.

         ಈ ಹಿಂದೆ ನಮ್ಮ ಶಾಲೆಗಳಲ್ಲಿ ಅತ್ಯುತ್ತಮ ನೈತಿಕ ಶಿಕ್ಷಣ ಬೋಧಿಸಲಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ನೈತಿಕ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡುತ್ತಿಲ್ಲ. ಇದರ ಪರಿಣಾಮವಾಗಿ ಸಮಾಜದಲ್ಲಿ ದುಷ್ಟರ ಅಟ್ಟಹಾಸ ಮಿತಿ ಮೀರುತ್ತಿದೆ ಎಂದು ಹೇಳಿದರು. ಆದರೆ, ಇಂದಿಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಲ್ಲಿ ಉತ್ತಮ ನಡವಳಿಕೆ, ಆರೋಗ್ಯಕರ ಹವ್ಯಾಸಗಳಿವೆ. ಇದು ಆಶಾದಾಯಕ ಬೆಳವಣಿಗೆ ಎಂದು ತಿಳಿಸಿದರು.

           ಇಂದಿನ ಯಾಂತ್ರಿಕ ಯುಗದಲ್ಲಿ ಮನುಷ್ಯ ನೈತಿಕತೆಯತ್ತ ಗಮನಹರಿಸುತ್ತಿಲ್ಲ. ವಿಶೇಷವಾಗಿ ಯುವಜನರು ಹಾದಿ ತಪ್ಪುತ್ತಿದ್ದಾರೆ. ಇದರ ಪರಿಣಾಮವಾಗಿ ಸಮಾಜದಲ್ಲಿ ವಿಚ್ಛಿದ್ರಕಾರಿ ಶಕ್ತಿಗಳು ವಿಜೃಂಭಿಸುತ್ತಿವೆ. ನಮ್ಮ ಸಮಾಜದಲ್ಲಿನ ಯುವಜನರ ಬಡತನವನ್ನು ಸಮಾಜ ವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಂಡು ಅವರನ್ನು ತಪ್ಪುದಾರಿಗೆ ಎಳೆಯುತ್ತಿವೆ. ಭಯೋತ್ಪಾದನೆ, ನಕ್ಸಲೀಯ ಚಟುವಟಿಕೆಗಳಿಗೆ ಅಮಾಯಕ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ. ಗಾಂಜಾ, ಅಫೀಮು ಸೇರಿದಂತೆ ವಿವಿಧ ಮಾದಕ ವಸ್ತುಗಳಿಗೆ ನಮ್ಮ ಯುವಜನತೆ ಬಲಿಯಾಗುತ್ತಿದ್ದಾರೆ. ಇದು ಆತಂಕದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

         ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾರಾಯಣ್ ನಾಯ್ಕರ್ ಮಾತನಾಡಿ, ಸಂಸದ ಜಿ.ಎಂ. ಸಿದ್ಧೇಶ್ವರ್ ಅವರು ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕಗಳನ್ನು ವಿತರಿಸುತ್ತಿರುವುದು ಸಂತಸದ ಸಂಗತಿ. ವಿದ್ಯಾರ್ಥಿಗಳು ಈ ನೆರವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಇದೇ ರೀತಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಮ್ಮ ತಂದೆ ದಿ. ಪಂಚಾಕ್ಷರಯ್ಯ ಮತ್ತು ದಿ. ಕಮಲಮ್ಮ ಅವರ ಹೆಸರಿನಲ್ಲಿ ದತ್ತಿ ನಿಧಿ ಇರಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡುತ್ತಿರುವುದು ಶ್ಲಾಘನೀಯ. ಈ ರೀತಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವವರ ಸಂಖ್ಯೆ ಹೆಚ್ಚಾಗಬೇಕು. ವಿದ್ಯಾರ್ಥಿಗಳು ಈ ಪ್ರತಿಭಾ ಪುರಸ್ಕಾರವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

           ಜಿ. ರುದ್ರಯ್ಯ ಮಾತನಾಡಿ, ಸಂಸದ ಜಿ.ಎಂ. ಸಿದ್ಧೇಶ್ವರ್ ಅವರ ಸಮಾಜ ಸೇವೆ ಅನುಕರಣೀಯವಾಗಿದೆ. ಈ ಬಾರಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ದಾವಣಗೆರೆಯ ಜಿಎಂಐಟಿಯಲ್ಲಿ ಉಚಿತವಾಗಿ ಪ್ರವೇಶಾವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

          ತಾಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ತಿಮ್ಮೇನಹಳ್ಳಿ ಟಿ.ಆರ್. ಚಂದಪ್ಪ, ಜಿಪಂ ಸದಸ್ಯ ಎಂ.ಆರ್. ಮಹೇಶ್, ತಾಪಂ ಅಧ್ಯಕ್ಷೆ ಸುಲೋಚನಮ್ಮ ಫಾಲಾಕ್ಷಪ್ಪ, ಬಿಇಒ ಜಿ.ಇ. ರಾಜೀವ್, ಪಪಂ ಸದಸ್ಯರಾದ ರಂಗಪ್ಪ, ಬಾಬು, ಕೆ.ವಿ. ಶ್ರೀಧರ್, ಕಸಬಾ ಸೊಸೈಟಿ ಅಧ್ಯಕ್ಷ ಎಚ್.ಬಿ. ಮೋಹನ್, ಎಚ್. ಕಡದಕಟ್ಟೆ ಗ್ರಾಪಂ ಸದಸ್ಯೆ ಲೀಲಾ ಶಿವಶಂಕರಯ್ಯ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರಕೆರೆ ಎ.ಎಂ. ನಾಗರಾಜ್, ಎಸ್‍ಡಿಎಂಸಿ ಸದಸ್ಯರಾದ ಮಿಯಾಜಾನ್‍ಸಾಬ್, ಶೇಖರಪ್ಪ, ನಿವೃತ್ತ ಪ್ರಾಂಶುಪಾಲ ಡಾ.ಎಂ. ಶಿವಶಂಕರಯ್ಯ, ಎಚ್.ಎಂ. ಅರುಣ್‍ಕುಮಾರ್, ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಎಸ್. ಧನಂಜಯ್, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಎಚ್. ಬಸವರಾಜಪ್ಪ, ಉಪನ್ಯಾಸಕರಾದ ಬಿ.ಇ. ಪ್ರಕಾಶ್, ಬಿ.ಜೆ. ಸುಪ್ರಿಯಾ, ಡಿ. ಲತಾ, ಸುಮತಿ, ಮಂಜಾನಾಯ್ಕ, ಲಕ್ಷ್ಮೀ, ಕಂಪ್ಯೂಟರ್ ಆಪರೇಟರ್ ಮಲ್ಲಿಕಾರ್ಜುನ್, ಅತಿಥಿ ಉಪನ್ಯಾಸಕರಾದ ಚನ್ನೇಶ್ ಬಿ.ಇದರಮನಿ, ಉಮ್ಮೇಹಾನಿ, ಎಚ್. ನಿಖಿತಾ, ಅಜಿತಾ ಜೋಗಳೇಕರ್, ಎಚ್. ಕಾವ್ಯ, ಪಿ. ಶಾಲಿನಿ, ಸಿಬ್ಬಂದಿ ನಾಗರಾಜ್, ಯು. ಸ್ವಾಮಿ ಇತರರು ಉಪಸ್ಥಿತರಿದ್ದರು.
ಕಾಲೇಜಿನ 750ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಬ್ಯಾಗ್‍ಗಳನ್ನು ವಿತರಿಸಲಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link