ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಿ

ದಾವಣಗೆರೆ:

      ಸರ್ಕಾರಿ ಶಾಲೆಗಳ ಶಿಕ್ಷಕರು ಪರಿಣಾಮಕಾರಿಯಾಗಿ ಭೋದಿಸುವುದರ ಜೊತೆಗೆ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೇರಣೆ ನೀಡಬೇಕೆಂದು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಉಷಾಕುಮಾರಿ ಕಿವಿಮಾತು ಹೇಳಿದರು.

       ನಗರದ ಮಾಗನೂರು ಮಲ್ಲೇಶಪ್ಪ ಶಿಕ್ಷಣ ವಿದ್ಯಾಲಯದಲ್ಲಿ ಮಂಗಳವಾರ ಶ್ರೀತರಳಬಾಳು ಮಠದ ಲಿಂ|| ಜಗದ್ಗುರು ಶ್ರೀಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ ಸ್ಮರಣಾರ್ಥ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಸಾಂಸ್ಕತಿಕ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

       ಪೋಷಕರು ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ದಾಖಲಿಸಲು, ಆ ಶಾಲೆಗಳಲ್ಲಿ ಪರಿಣಾಮಕಾರಿ ಭೋದನೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿ, ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸುತ್ತಾರೆಂಬ ಏಕೈಕ ಕಾರಣಕ್ಕೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸಲು ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಾಗಲು ಸಾಧ್ಯವಾಗಲಿದೆ ಎಂದರು.

       ಶಿಕ್ಷಕ ವೃತ್ತಿಗೆ ಹೆಚ್ಚು ಬೇಡಿಕೆ ಬರಬೇಕಾದರೆ, ಸರ್ಕಾರಿ ಶಾಲೆಗಳಲ್ಲಿ ಪರಿಣಾಮಕಾರಿ ಬೋಧನೆ ಹಾಗೂ ದಾಖಲಾತಿಗಳು ಹೆಚ್ಚಾಗಬೇಕು. ರಾಜ್ಯದ ಕಲ್ಬುರ್ಗಿಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗಿರುವುದರಿಂದ ಅಲ್ಲಿನ ಶಿಕ್ಷಕರಿಗೆ ಹೆಚ್ಚಿನ ಬೇಡಿಕೆ ಇದೆ. ಅದೇ ರೀತಿ ದಾವಣಗೆರೆಯಲ್ಲೂ ಸಹ ಮಕ್ಕಳ ದಾಖಲಾತಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಬೇಕು. ಇದಕ್ಕಾಗಿ ಶಿಕ್ಷಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.

        ಸರ್ಕಾರಿ ನೌಕರಿ ಸಿಗಲಿಲ್ಲವೆಂಬ ಭಾವನೆಯಿಂದ ಹೊರಬಂದು ಸಕಾರಾತ್ಮಕ ಚಿಂತನೆಯಲ್ಲಿ ತೊಡಗುವ ಮೂಲಕ ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿಗಳಾಗಿ ಭವಿಷ್ಯ ರೂಪಿಸಿಕೊಳ್ಳಬೇಕು. ಪ್ರಶಿಕ್ಷಣಾರ್ಥಿಗಳಲ್ಲಿ ಡಿ.ಎಡ್ ಮಾಡಿದರೆ ಉದ್ಯೋಗ ದೊರೆಯುವುದಿಲ್ಲ ಎಂಬ ನಿರಾಸೆಯ ಭಾವನೆಯಿಂದ ಬಿ.ಎಡ್ ಕಲಿಯಲು ಹೆಚ್ಚು ಆದ್ಯತೆ ನೀಡಲಾಗುತ್ತದೆ. ಖ.ಎಡ್ ನಿಂದಲೂ ಉನ್ನತ ಸ್ಥಾನ ಗಳಿಸಬಹುದು ಇದಕ್ಕೆ ಸತತ ಪರಿಶ್ರಮ ಮುಖ್ಯ ಎಂದರು.

          ಮಾನವ ಸಂಪತ್ತು ಎಂದರೆ ಯುವಕರು ಶಕ್ತಿ. ದೇಶದಲ್ಲಿ ಶೇ 25 ರಿಂದ 30ರಷ್ಟು ಯುವಕರಿದ್ದಾರೆ. ಈ ಮಾನವ ಸಂಪನ್ಮೂಲ ಸದ್ಬಳಕೆಯಾದರೆ, ದೇಶ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ ಎಂದು ಪ್ರತಿಪಾದಿಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಕೆ.ಟಿ ನಾಗರಾಜ್ ನಾಯ್ಕ್, ಸಂತೋಷ್ ಕುಮಾರ್, ವಿಠ್ಠಲಾಪುರದ ರುದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link