ದಾವಣಗೆರೆ:
ನಮೂನೆ-57ರ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ವಿತರಿಸಬೇಕು ಹಾಗೂ ಆನಗೋಡು ಹೋಬಳಿ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲೂ ಇರುವ ನೀರಿನ ಸಮಸ್ಯೆಯನ್ನು ನೀಗಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ಯ ಕಾರ್ಯಕರ್ತರು ತಾಲೂಕಿನ ಆನಗೋಡು ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ತಾಲೂಕಿನ ಆನಗೋಡು ಗ್ರಾಮದ ನಾಡ ಕಚೇರಿಗೆ ಮುತ್ತಿಗೆ ಹಾಕಿದ ರೈತರು, ಹಕ್ಕುಪತ್ರಕ್ಕಾಗಿ ಅರ್ಜಿಸಲ್ಲಿರುವ ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ವಿಲೇವಾರಿ ಮಾಡದ ಹಾಗೂ ಗ್ರಾಮೀಣ ಪ್ರದೇಶಗಳ ಜನರ ನೀರಿನ ಬವಣೆ ಪರಿಹರಿಸದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಹೋಬಳಿ ಅಧ್ಯಕ್ಷ ಎಂ.ಸಿ.ಕೃಷ್ಣಮೂರ್ತಿ, ದಾವಣಗೆರೆ ತಾಲೂಕಿನ ಆನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಬಗರ್ ಹುಕ್ಕುಂ ಸಾಗುವಳಿದಾರರು ನಮೂನೆ-57ರ ಅಡಿಯಲ್ಲಿ ಹಕ್ಕುಪತ್ರ ಕೋರಿ ಅರ್ಜಿ ಸಲ್ಲಿಸಿ, ಹಲವು ವರ್ಷಗಳೇ ಕಳೆದಿವೆ. ಆದರೂ, ಸಹ ಅಧಿಕಾರಿಗಳು ಅರ್ಜಿಗಳನ್ನು ವಿಲೇವಾರಿ ಮಾಡದೇ, ವಿಳಂಬ ಧೋರಣೆ ಅನುಸರಿಸುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮೂನೆ-57ರ ಅಡಿಯಲ್ಲಿ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದೇವೆ. ಆದರೆ, ಅರ್ಜಿಗಳನ್ನು ಸರ್ಕಾರಕ್ಕೆ ವಿಲೇವಾರಿ ಮಾಡಿ, ಸಾಗುವಳಿದಾರರಿಗೆ ತ್ವರಿತವಾಗಿ ಹಕ್ಕುಪತ್ರ ವಿತರಿಸಬೇಕಾದ ಅಧಿಕಾರಿಗಳು ಅಸಡ್ಡೆ ವಹಿಸಿರುವುದು ಸರಿಯಲ್ಲ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು, ಸಾಗುವಳಿದಾರರು ಸಲ್ಲಿಸಿದ ಸಾಗುವಳಿ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಿ, ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಆನಗೋಡು ಹೋಬಳಿ ವ್ಯಾಪ್ತಿಯಲ್ಲಿ ಜನ, ಜಾನುವಾರುಗಳಿಗೂ ಕುಡಿಯಲು ನೀರಿಲ್ಲದಂತಹ ಸ್ಥಿತಿ ಬಂದೊದಗಿದೆ. ಹೋಬಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿನಕ್ಕೂ ಉಲ್ಭಣಿಸುತ್ತಿದೆ. ಆದರೂ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲು ಮುಂದಾಗಿಲ್ಲ. ಹೀಗಾಗಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.
ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ ಮಾತನಾಡಿ, ಬಗರ್ ಹುಕುಂ ಸಾಗುವಳಿದಾರರಿಗೆ ನಮೂನೆ 57ರ ಅಡಿಯಲ್ಲಿ ಸಾಗುವಳಿಗಾಗಿ ಸಲ್ಲಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಸಾಗುವಳಿ ಪತ್ರ ವಿತರಣೆ ಮಾಡಬೇಕು. ಆನಗೋಡು ಹೋಬಳಿ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ನಿರ್ಮಾಣವಾಗಿರುವ ಕುಡಿಯುವ ನೀರಿನ ಬವಣೆ ನೀಗಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಕರಿಲಕ್ಕೇನಹಳ್ಳಿ ನಾಗರಾಜ, ಬುಳ್ಳಾಪುರ ಪೂಜಾರ ನಾಗಪ್ಪ, ನರಸೀಪುರ ಮಂಜಣ್ಣ, ಹೊನ್ನೂರು ಮಂಜಪ್ಪ, ಗುಮ್ಮನೂರು ರಾಜಪ್ಪ, ಭೀಮಪ್ಪ, ರಾಮಪ್ಪ, ಗುಮ್ಮನೂರು ರುದ್ರೇಶಿ, ಕೆಂಚಮ್ಮನಹಳ್ಳಿ ಹನುಮಂತ, ಗುಡಾಳ್ ಸೈಕಲ್ ರಾಜಪ್ಪ, ಗುಡಾಳ್ ಗೊಲ್ಲರಹಟ್ಟಿ ಮಹೇಶಪ್ಪ, ಹುಲಿಕಟ್ಟೆ ಮಂಜಪ್ಪ, ಮ್ಯಾಸರಹಳ್ಳಿ ಸಂಜೀವಪ್ಪ, ಕರದಪ್ಪನ ವೆಂಕಟೇಶ, ಪುಟ್ಟಾನಾಯ್ಕ ಆಲೂರುಹಟ್ಟಿ ಮತ್ತಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
