ಗುಬ್ಬಿ
ಗ್ರಾಮೀಣ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿ ಹೊಂದುವ ಮೂಲಕ ಅಭಿವೃದ್ಧಿ ಹೊಂದುವಂತೆ ಲಯನ್ಸ್ ಸಂಸ್ಥೆ ಅಧ್ಯಕ್ಷ ಉಂಡೆ ರಾಮಯ್ಯ ಕರೆ ನೀಡಿದರು
ತಾಲ್ಲೂಕಿನ ಅಮ್ಮನಘಟ್ಟ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಶೈಕ್ಷಣಿಕ ಗುಣಮಟ್ಟ ಉತ್ತಮಪಡಿಸಲು ಸರ್ಕಾರಗಳು ಹಲವು ಹಂತದ ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸಿವೆ. ಇಂದಿನ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದುವಂತೆ ತಿಳಿಸಿದರು.
ಲಯನ್ಸ್ ಸಂಸ್ಥೆ ಕಾರ್ಯದರ್ಶಿ ಜಿ.ಬಿ.ಮಲ್ಲಪ್ಪ ಮಾತನಾಡಿ ಲಯನ್ಸ್ ಸಂಸ್ಥೆ ವತಿಯಿಂದ ಶೈಕ್ಷಣಿಕ ಮತ್ತು ಸಾಮಾಜಿಕ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಆರೋಗ್ಯ ಶಿಬಿರಗಳು ಸೇರಿದಂತೆ ಗ್ರಾಮೀಣ ಭಾಗದ ಶಾಲೆಗಳ ಮಕ್ಕಳಿಗೆ ಸಮವಸ್ತ್ರ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಸೇವಾ ಕಾರ್ಯಗಳನ್ನು ಮಾಡುತ್ತಿರುವುದಾಗಿ ತಿಳಿಸಿದರು.
ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಹಲವು ಸಮಾಜ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದ್ದು ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗೆ ಪೂರಕವಾದ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಶಾಲೆಗೆ ಗೇಟ್ ನಿರ್ಮಾಣ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಸಿದ್ದಗಂಗಾ ಶ್ರೀಗಳ 112 ನೇ ಜಯಂತಿ ಅಂಗವಾಗಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರೀಗಳ ಚಿಂತನೆ ಮತ್ತು ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲಾಯಿತು.ವಸತಿ ನಿಲಯದಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡಿ ಪರೀಕ್ಷೆ ಪೂರ್ಣಗೊಳಿಸಿದ ವಿದ್ಯಾರ್ಥಿನಿಯರಿಗೆ ಲಯನ್ಸ್ ಸಂಸ್ಥೆ ವತಿಯಿಂದ ಸಮವಸ್ತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಖಜಾಂಚಿ ಸಿದ್ದಪ್ಪ ಗುಜ್ಜರಿ, ಪದಾಧಿಕಾರಿಗಳಾದ ಎಸ್.ಆರ್.ಎಸ್.ರೇಣುಕಯ್ಯ, ಡಿ.ಆರ್.ಕೀರ್ತಿರಾಜ್, ಕರೇಗೌಡ, ಅಧ್ಯಾಪಕರುಗಳಾದ ಸಿ.ರಮೇಶ್, ಸಂಜೀವಯ್ಯ, ಎ.ಎಲ್.ಪ್ರಸನ್ನ, ಜಯಶ್ರೀಯಂಡೀಗೇರಿ, ಸಿ.ಚೇತನ, ವಸತಿ ನಿಲಯದ ಪಾಲಕಿ ಹೇಮಾ ಸೇರಿದಂತೆ ವಿದ್ಯಾರ್ಥಿನಿಯರ ಪೋಷಕರು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
