ಬೆಂಗಳೂರು
ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತ ಮಂಡಳಿಯೊಂದಿಗೆ ನಡೆದ ಸಂದಾನ ವಿಫಲವಾದ ಹಿನ್ನೆಲೆಯಲ್ಲಿ ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಹೆಚ್.ಎ.ಎಲ್) ಉದ್ಯೋಗಿಗಳು ಸೋಮವಾರದಿಂದ ಅನಿರ್ದಿಷ್ಟ ಅವಧಿ ಮುಷ್ಕರ ಕೈಗೊಂಡಿದ್ದಾರೆ.
ಸಾರ್ವಜನಿಕ ವಲಯದ ಉದ್ಯಮ ಹೆಚ್ಎಎಲ್ ನ ಉದ್ಯೋಗಿಗಳು ಮತ್ತು ಆಡಳಿತ ಮಂಡಳಿಯ ನಡುವೆ ಸಂಬಳ, ಬಡ್ತಿ, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ದಿನಗಳಿಂದ ಚರ್ಚೆ ನಡೆಯುತ್ತಿದ್ದು ನೌಕರರ ಬೇಡಿಕೆಗೆ ಆಡಳಿತ ಮಂಡಳಿ ಮನ್ನಣೆ ನೀಡದೆ ಹಠಮಾರಿತನ ಧೋರಣೆ ಮುಂದುವರಿಸಿದ ಹಿನ್ನೆಲೆಯಲ್ಲಿ ಅನಿವಾರ್ಯದಿಂದ ಉದ್ಯೋಗಿಗಳು ಮುಷ್ಕರ ಕೈಗೊಂಡಿದ್ದಾರೆ.
ವಿವಿಧ ಭಾಗಗಳ ಹೆಚ್.ಎ.ಎಲ್. ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳು ಕೇಂದ್ರ ಕಚೇರಿ ಬೆಂಗಳೂರಿನ ಹೆಚ್.ಎ.ಎಲ್. ಕಚೇರಿಗೆ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಹೆಚ್.ಎ.ಎಲ್. ನ ಟ್ರೇಡ್ ಯೂನಿಯನ್ ಸಮನ್ವಯ ಸಮಿತಿ ಕರೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಆರಂಭಿಸಲಾಗಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಾಗಿ ೨೦೧೬ ರಿಂದ ಉದ್ಯೋಗಿಗಳು ಮತ್ತು ಕೇಂದ್ರ ಆಡಳಿತ ಮಂಡಳಿಯ ನಡುವೆ ಮಾತುಕತೆ ನಡೆದು ಅದು ೨೦೧೭ರ ಜನವರಿ ಯಿಂದ ಜಾರಿಗೆ ಬರಬೇಕಾಗಿತ್ತು. ಒಪ್ಪಂದ ದಂತೆ ಬೇಡಿಕೆಯನ್ನು ಈಡೇರಿಸದ ಆಡಳಿತ ಮಂಡಳಿಯ ಕ್ರಮದ ವಿರುದ್ಧ ತಿರುಗಿ ಬಿದ್ದಿರುವ ಉದ್ಯೋಗಿಗಳು ಇಂದಿನಿಂದ ಅನಿರ್ದಿಷ್ಟ ಅವಧಿ ಮುಷ್ಕರ ಕೈಗೊಳ್ಳಲಾಗಿದೆ ಎಂದು ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಸೂರ್ಯದೇವ್ ಚಂದ್ರಶೇಖರ್ ತಿಳಿಸಿದ್ದಾರೆ.
ಹೆಚ್.ಎ.ಎಲ್. ರಾಷ್ಟ್ರೀಯ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿಲ್ಲ. ಉದ್ಯೋಗಿಗಳು ಹಲವು ವರ್ಷಗಳಿಂದ ಸಂಬಳ ಏರಿಕೆ ಮಾಡುವಂತೆ ಮನವಿ ಮಾಡಿದ್ದರೂ ಗಮನ ಹರಿಸಿಲ್ಲ. ಹೀಗಾಗಿ ಅನಿವಾರ್ಯವಾಗಿ ಇಂತಹ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








