ಬೆಂಗಳೂರು
ಮಾರಣಾಂತಿಕ ಸೋಂಕು ಕೊರೊನಾ ಹಿನ್ನೆಲೆಯಲ್ಲಿ ಚೀನಾದಿಂದ ರಾಜ್ಯಕ್ಕೆ ಬಂದ 51 ಜನರ ಮೇಲೆ ತೀವ್ರ ನಿಗಾ ಇಡಲಾಗಿದ್ದು ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ಮತ್ತು ನಿಗಾವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಗಳು ತಿಳಿಸಿವೆ.
ರಾಜ್ಯಕ್ಕೆ ಆಗಮಿಸಿದ 51 ಜನರ ಪೈಕಿ 46 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. ಇಬ್ಬರನ್ನು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಾಲ್ವರು ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ.ಇದೂವರೆವಿಗೂ 29 ಮಂದಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಎಲ್ಲರಿಂದಲೂ ನಕರಾತ್ಮಕ ವರದಿ ಬಂದಿದೆ. ಆದರೂ ನಾಲ್ಕೈದು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಕಟ್ಟೆಚ್ಚರವಹಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಂಡಿದೆ.
ಹಲವು ದೇಶಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ 51 ಮಂದಿ ಆಗಮಿಸಿದ್ದು ಎಲ್ಲರ ಮೇಲೆ ನಿಗಾಇಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








