ಬೆಂಗಳೂರು
ರಾಜ್ಯದ ಮೈತ್ರಿ ಸರ್ಕಾರ ಜನತೆಗೆ ಮತ್ತು ರೈತ ಸಮುದಾಯಕ್ಕೆ ಕೊಟ್ಟ ಭರವಸೆಯಂತೆ ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ದಿಟ್ಟ ಮತ್ತು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಒತ್ತಾಯ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರಿಗೆ ನಾಲ್ಕು ಪುಟಗಳ ಪತ್ರ ಬರೆದಿರುವ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದ್ದು, ಮುಖ್ಯಮಂತ್ರಿ ಅವರು ಕೇವಲ ಸಾಲಮನ್ನಾ ಮಾಡುವುದಾಗಿ ಪದೆ ಪದೆ ಹೇಳುತ್ತಾ ಬಂದಿದ್ದಾರೆ. ರೈತರ ಆತ್ಮಹತ್ಯೆ ನಿಂತಿಲ್ಲ, ಇದನ್ನು ಸರ್ಕಾರ ಗಂಭೀರವಾಗಿ ಪರಿಣಿಸಿ ಇನ್ನಾದರೂ ದಿಟ್ಟ ಕ್ರಮ ಕೈಗೊಂಡು ರಾಜ್ಯದ ರೈತರನ್ನು ಸಂಕಷ್ಟದಿಂದ ಪಾರುಮಾಡಬೇಕು ಎಂದು ಅವರು ಹೇಳಿದ್ದಾರೆ.
ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. ಮುಖ್ಯಮಂತ್ರಿ ಅವರು ಇನ್ನು ಮುಂದಾದರೂ ಅಭಿವೃದ್ಧಿ ಕಾರ್ಯಕ್ರಮಗಳ ವೇಗ ಹೆಚ್ಚಿಸಲು ಹೆಚ್ಚಿನ ಪ್ರಯತ್ನ ಮಾಡಬೇಕು ಎಂದಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಆವಾಸ್ ನಗರ ಯೋಜನೆಯನ್ನು ಪ್ರಕಟಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ರಾಜ್ಯದಲ್ಲಿ ಬಡಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆ.ಎಸ್. ಈಶ್ವರಪ್ಪ ಪತ್ರದಲ್ಲಿ ಪ್ರಸ್ತಾಪ ಮಾಡಿದ್ದಾರೆ.