73ನೇ ಸ್ವಾತಂತ್ರ್ಯ ದಿನ ಅದ್ದೂರಿ ಆಚರಣೆ : ಡಿಸಿ

ತುಮಕೂರು

   ಜಿಲ್ಲಾಡಳಿತದ ವತಿಯಿಂದ ಬರುವ ಆಗಸ್ಟ್ 15ರಂದು 73ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

   ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಗೊಳಿಸಲು ವಿವಿಧ ಅಧಿಕಾರಿಗಳ ನೇತೃತ್ವದ ಸ್ವಾಗತ ಸಮಿತಿ, ಪೆರೇಡ್ ಸಮಿತಿ, ಕವಾಯತು ಸಮಿತಿ, ಕ್ರೀಡಾಂಗಣ ಸಮಿತಿ, ಬಹುಮಾನ ವಿತರಣೆ ಸಮಿತಿ ಹಾಗೂ ಸಹಿ ಹಂಚಿಕೆ ಸಮಿತಿ ಸೇರಿದಂತೆ 7 ಸಮಿತಿಗಳನ್ನು ರಚಿಸಿ ಸಂಬಂಧಿಸಿದವರಿಗೆ ಕಾರ್ಯ ಹಂಚಿಕೆ ಮಾಡಲಾಯಿತು.

ಆಗಸ್ಟ್ 15ರ ಕಾರ್ಯಕ್ರಮಗಳು:-

     ಸ್ವಾತಂತ್ರ್ಯ ದಿನೋತ್ಸವದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 7.45 ಗಂಟೆಗೆ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರಭಾತ್ ಪೇರಿ; 8-55ಕ್ಕೆ ಮುಖ್ಯ ಅತಿಥಿಗಳ ಆಗಮನ; 9 ಗಂಟೆಗೆ ಧ್ವಜಾರೋಹಣ, ಗೌರವರಕ್ಷೆ ಸ್ವೀಕಾರ ಮತ್ತು ಸಂದೇಶ; 9-40ರಿಂದ ಮಕ್ಕಳಿಂದ ಆಕರ್ಷಕ ಕವಾಯತು ನಡೆಯಲಿದ್ದು, ಸಂಜೆ 5 ಗಂಟೆಯಿಂದ ನಗರದ ಗಾಜಿನಮನೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಯಿತು.

ನೂತನ ಧ್ವಜ ಕಡ್ಡಾಯ :-

      ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಗ್ರಾಮ ಪಂಚಾಯತಿ ಸೇರಿದಂತೆ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಕಡ್ಡಾಯವಾಗಿ ನೂತನ ಧ್ವಜವನ್ನೇ ಖರೀದಿಸಿ ಧ್ವಜಾರೋಹಣ ನೆರವೇರಿಸಬೇಕು. ಕೆಲವು ಕಛೇರಿಗಳಲ್ಲಿ ಈಗಲೂ ಬಣ್ಣ ಮಾಸಿ ಹೋಗಿರುವ ಹಳೆಯ ಧ್ವಜವನ್ನೇ ಧ್ವಜಾರೋಹಣಕ್ಕೆ ಬಳಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಆಗಸ್ಟ್ 15ರವರೆಗೂ ಕಾಯದೆ ಮುಂಗಡವಾಗಿಯೇ ಹೊಸ ಬಾವುಟವನ್ನು ಖರೀದಿಸಿಟ್ಟುಕೊಳ್ಳಲು ನಿರ್ದೇಶನ ನೀಡಿದರು.

       ಸ್ವಾತಂತ್ರ್ಯ ದಿನಾಚರಣೆ ಜರುಗುವ ನಗರದ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ಸುಣ್ಣಬಣ್ಣದಿಂದ ಸುಂದರಗೊಳಿಸಬೇಕೆಂದರಲ್ಲದೆ, ಎಲ್ಲಾ ಸರ್ಕಾರಿ ಕಛೇರಿ ಹಾಗೂ ನಗರದ ಮುಖ್ಯ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

       ಕಳೆದ ಬಾರಿಗಿಂತ ಈ ಬಾರಿ ಸ್ವಾತಂತ್ರ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಂದ ಹೆಚ್ಚು ತಾಲೀಮು ನಡೆಸಿ, ಉತ್ತಮ ಪ್ರದರ್ಶನ ನೀಡುವಂತೆ ನಿಗಾವಹಿಸಬೇಕೆಂದು ಡಿಡಿಪಿಐ ಕಾಮಾಕ್ಷಿ ಅವರಿಗೆ ಸೂಚನೆ ನೀಡಿದರು. ತಾಲೀಮಿಗಾಗಿ ಬರುವ ವಿದ್ಯಾರ್ಥಿಗಳಿಗೆ ಆಗಸ್ಟ್ 11 ರಿಂದ 14ರವರೆಗೆ ಕುಡಿಯುವ ನೀರು, ಉಪಹಾರದ ವ್ಯವಸ್ಥೆ ಮಾಡಬೇಕಲ್ಲದೆ ಮುನ್ನೆಚ್ಚರಿಕಾ ಕ್ರಮವಾಗಿ ಇಬ್ಬರು ವೈದ್ಯಾಧಿಕಾರಿಗಳನ್ನು ಹಾಗೂ ಆ್ಯಂಬುಲೆನ್ಸ್‍ನ್ನು ನಿಯೋಜಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

      ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿಯುವವರೆಗೂ ಸ್ಮಾರ್ಟ್ ಸಿಟಿ ವತಿಯಿಂದ ಯಾವುದೇ ಕಾಮಗಾರಿಯನ್ನು ಕೈಗೊಳ್ಳಬಾರದು ಎಂದು ಸೂಚಿಸಿದರಲ್ಲದೆ, ಮಳೆಗಾಲ ಇರುವುದರಿಂದ ಕ್ರೀಡಾಂಗಣದ ಮೈದಾನ ಕೆಸರಾಗದಂತೆ ರೈನ್‍ಪ್ರೂಫ್ ಟಾರ್ಪಲ್ ಹಾಕಲು ಅಧಿಕಾರಿಗಳಿಗೆ ಸಲಹೆ ನೀಡಿದರು.

      ಕಾರ್ಯಕ್ರಮವನ್ನು ವೀಕ್ಷಿಸಲು ಅನುವಾಗುವಂತೆ ಜನಪ್ರತಿನಿಧಿಗಳು ಸೇರಿದಂತೆ ಗಣ್ಯವ್ಯಕ್ತಿಗಳು ಕುಳಿತುಕೊಳ್ಳಲು ಪ್ರತ್ಯೇಕ ಆಸನ ಹಾಗೂ ಬ್ಯಾರಿಕೇಡಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿರುವ ಜಿಲ್ಲೆಯ 3 ಟಾಪರ್ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಹಾಗೂ ಕಳೆದ ಒಂದು ವರ್ಷದಲ್ಲಿ ಅಪಘಾತರಹಿತ ವಾಹನ ಚಾಲನೆ ಮಾಡಿದ ಕೆಎಸ್‍ಆರ್‍ಟಿಸಿ ಬಸ್ ಚಾಲಕರಿಗೆ ಬೆಳ್ಳಿ ಪದಕ ನೀಡಿ ಗೌರವಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

    ಸ್ವಾತಂತ್ರ್ಯ ದಿನಾಚರಣೆಯ ಬೆಳಗಿನ ಹಾಗೂ ಸಂಜೆಯ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು. ಎಲ್ಲಾ ಇಲಾಖೆಗಳ ಮುಖ್ಯಸ್ಥರು ವೈಯಕ್ತಿಕ ಆಸಕ್ತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ಧತಾ ಕಾರ್ಯಗಳಿಗೆ ತಮ್ಮ ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಯಾವುದೇ ಲೋಪದೋಷಗಳುಂಟಾಗದಂತೆ ವ್ಯವಸ್ಥಿತ ಆಚರಣೆಗೆ ಶ್ರಮಿಸಬೇಕು ಎಂದು ಸೂಚನೆ ನೀಡಿದರು.

     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಮಾತನಾಡಿ, ಜಿಲ್ಲೆಯ ಮಹಿಳೆಯರ ಭದ್ರತೆ ಹಾಗೂ ಸುರಕ್ಷತೆಗಾಗಿ ಕಾರ್ಯನಿರ್ವಹಿಸಲು ಪೊಲೀಸ್ ಇಲಾಖೆ ವತಿಯಿಂದ “ಕಲ್ಪತರು ಪಡೆ”ಯನ್ನು ರಚಿಸಲಾಗಿದೆ. ಇದಕ್ಕಾಗಿ 70 ಮಹಿಳಾ ಕಾನ್ಸ್ ಟೇಬಲ್‍ಗಳಿಗೆ ತರಬೇತಿ ನೀಡಲಾಗುತ್ತಿದ್ದು, ಸದರಿ ಪಡೆಯು ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಕವಾಯತು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ತುಮಕೂರು ವಿಭಾಗಾಧಿಕಾರಿ ಶಿವಕುಮಾರ್, ಪಾಲಿಕೆ ಆಯುಕ್ತ ಭೂಬಾಲನ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap